ಮಂಡ್ಯ : ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಮಳೆಯಾಗದ ಪರಿಣಾಮ ತೀವ್ರ ಬರಗಾಲ ಆವರಿಸಿದೆ. ರೈತರು ಕೆಆರ್ಎಸ್ ಜಲಾಶಯದ ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.
ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ 107 ಅಡಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸಬೇಕಾಗುತ್ತದೆ. ಹೀಗಾಗಿ, ರೈತರು ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು.
ಈಗಾಗಲೇ ಮದ್ದೂರು ತಾಲೂಕಿನ ವಿ.ಸಿ.ನಾಲೆಯ ಕೊನೆ ಭಾಗಕ್ಕೂ ಸರಾಗವಾಗಿ ನೀರು ಹರಿಯುವಂತೆ ಹಂತ ಹಂತವಾಗಿ ನಾಲೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ರೈತರ ಬಹು ದೊಡ್ಡ ಸಮಸ್ಯೆಯಾಗಿರುವ ನಾಲೆಗಳ ಅಭಿವೃದ್ಧಿಗೆ ಹಂತ ಹಂತವಾಗಿ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರಾದ ಶಿವಚರಣ್, ಮಹದೇವು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪಿ.ರಾಘವಾ, ಪ್ರವೀಣ್, ಪ್ರಶಾಂತ್ ಕಾವೇರಿ ನೀರಾವರಿ ನಿಗಮದ ಇಇ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು.