ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಅಥವಾ ಗಲಭೆಗಳಿಗೆ ಆಸ್ಪದ ನೀಡದೆ, ಆಯೋಜಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ ನಿರ್ದೇಶನ ನೀಡಿದ್ದಾರೆ.
ಮದ್ದೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಸರ್ವಧರ್ಮ ಸೌಹಾರ್ದ ಹಾಗೂ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಸರ ಸ್ನೇಹಿ ಗಣೇಶ ಹಾಗೂ ಅನುಮತಿ ಕಡ್ಡಾಯ
ತಾಲೂಕಿನ ಎಲ್ಲಾ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಅಗತ್ಯ ಅನುಮತಿ ಪತ್ರಗಳನ್ನು ಪಡೆದು, ಇಲಾಖೆಯ ಸೂಚನೆಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.
ಡಿಜೆಗೆ ನಿಷೇಧ, ರಾತ್ರಿ 10ರ ನಂತರ ಮೈಕ್ ಬಂದ್
ಗಣೇಶ ಮಂಟಪಗಳಲ್ಲಿ ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಮತ್ತು ಸಭ್ಯ ಹಾಡುಗಳನ್ನು ಮಾತ್ರ ಹಾಕಬೇಕು. ಯಾವುದೇ ಕಾರಣಕ್ಕೂ ಡಿಜೆ ಬಳಸಲು ಅವಕಾಶವಿಲ್ಲ. ಒಂದು ವೇಳೆ ನಿಯಮ ಮೀರಿ ಡಿಜೆ ಹಾಕಿದರೆ ಆಯೋಜಕರ ವಿರುದ್ಧವೇ ದೂರು ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಿಸಿಟಿವಿ ಕಣ್ಗಾವಲು ಹಾಗೂ ಸುರಕ್ಷತಾ ಮಾರ್ಗಸೂಚಿ
ಮೆರವಣಿಗೆ ಸಾಗುವ ಪ್ರಮುಖ ಮಾರ್ಗಗಳಲ್ಲಿ ಪೊಲೀಸ್ ಇಲಾಖೆಯಿಂದಲೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ವಿಸರ್ಜನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಸೂಕ್ತ ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಈಜು ಪರಿಣಿತರನ್ನು ಸಜ್ಜುಗೊಳಿಸಬೇಕು. ಕತ್ತಲಾಗುವ ಮುನ್ನವೇ ಮೂರ್ತಿ ವಿಸರ್ಜನೆ ಪೂರ್ಣಗೊಳಿಸಲು ಆಯೋಜಕರು ಸಹಕರಿಸಬೇಕು ಎಂದು ಎಸ್ಪಿ ಮನವಿ ಮಾಡಿದರು.
ಹಬ್ಬದ ನೆಪದಲ್ಲಿ ಅನಗತ್ಯವಾಗಿ ಗಲಭೆ ಅಥವಾ ಘರ್ಷಣೆಗೆ ಯತ್ನಿಸುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರೂ ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕೆಂದು ಕೋರಿದರು. ಸಭೆಯಲ್ಲಿ ಸಾರ್ವಜನಿಕರು ನೀಡಿದ ಸಲಹೆಗಳಿಗೆ ಎಸ್ಪಿ ಸೂಕ್ತ ಅಭಯ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ. ಶಿವಕುಮಾರ್ ಬಿರಾದಾರ್, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐಗಳಾದ ನವೀನ್, ನಾರಾಯಣಿ, ಅನಿಲ್ ಕುಮಾರ್, ಸೆಸ್ಕ್ ಇಇ ಶಿವಕುಮಾರ್, ತಾಪಂ ಎಒ ಗಂಗರಾಜು ಹಾಗೂ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಗಿರೀಶ್ ರಾಜ್, ಮಂಡ್ಯ