ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸೆಪ್ಟೆಂಬರ್ 7, 2026 ರಂದು ಈ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಮುಖ ಬದಲಾವಣೆಗಳು
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಡಾ. ರಾಕೇಶ್ ಕುಮಾರ್ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರದೇಶದ 'ಬೆಂಗಳೂರು ದಕ್ಷಿಣ ನಗರ ಪಾಲಿಕೆ'ಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಇಲ್ಲಿಯವರೆಗೆ ಆಯುಕ್ತರಾಗಿದ್ದ ಕೆ.ಎನ್. ರಮೇಶ್ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ (ಆರೋಗ್ಯ ಮತ್ತು ಶಿಕ್ಷಣ) ನಿಯೋಜಿಸಲಾಗಿದೆ.
ಇದೇ ವೇಳೆ, ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ಶ ಶಿಲ್ಪಾ ನಾಗ್ ಸಿ.ಟಿ. ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರ (ಅರಣ್ಯ, ಪರಿಸರ ಮತ್ತು ವಾಯುಗುಣ ವೈಪರೀತ್ಯ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ) ಜವಾಬ್ದಾರಿ ನೀಡಲಾಗಿದೆ.
ಇತರೆ ಅಧಿಕಾರಿಗಳ ನೂತನ ಹುದ್ದೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿದ್ದ (ಆರೋಗ್ಯ ಮತ್ತು ಶಿಕ್ಷಣ) ವೆಂಕಟಾಚಲಪತಿ ಆರ್. ಅವರನ್ನು ಗ್ರೇಟರ್ ಬೆಂಗಳೂರು ಪ್ರದೇಶದ 'ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್'ನ ಹೆಚ್ಚುವರಿ ಆಯುಕ್ತರನ್ನಾಗಿ (ಅಭಿವೃದ್ಧಿ) ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಎಲ್ಲಾ ವರ್ಗಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.