ಬೆಂಗಳೂರು: ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಶೇಕಡಾ 7.5ರಷ್ಟು ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕರಡು ತಿದ್ದುಪಡಿ ನಿಯಮವನ್ನು ಪ್ರಕಟಿಸಿದೆ. ಉನ್ನತ ಶಿಕ್ಷಣ ಇಲಾಖೆಯು ಈ ಕರಡು ನಿಯಮ ಅಧಿಸೂಚನೆಯನ್ನು ಹೊರಡಿಸಿದ್ದು, ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.
2006ರ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರಕಾರಿ ಸೀಟುಗಳ ಪ್ರವೇಶ ನಿಯಮಾವಳಿಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, ಇದರ ಭಾಗವಾಗಿ 'ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರಕಾರಿ ಸೀಟುಗಳ ಪ್ರವೇಶ (ತಿದ್ದುಪಡಿ) ನಿಯಮ 2026'ರ ಕರಡನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಶೇಕಡಾ 15ರಷ್ಟು ಸರ್ಕಾರಿ ಸೀಟುಗಳ ಪೈಕಿ ಶೇಕಡಾ 7.5ರಷ್ಟು ಸ್ಥಾನಗಳನ್ನು ಗ್ರಾಮೀಣ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಅಡ್ಡಲಾಗಿ (horizontally) ಕಾಯ್ದಿರಿಸಲು ಈ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾಗಿದೆ.
ಈ ಹೊಸ ನಿಯಮದ ಪ್ರಕಾರ, ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ವಹಿಸುತ್ತಿರುವ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಒಳಮೀಸಲಾತಿಯ ಶೇಕಡಾ 7.5ರಷ್ಟು ಸೀಟುಗಳು ಲಭ್ಯವಾಗಲಿವೆ. ಅಷ್ಟೇ ಅಲ್ಲದೆ, ಗ್ರಾಮೀಣ ಭಾಗದಲ್ಲಿರುವ ಅನುದಾನಿತ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಓದಿದ ಅರ್ಹ ಅಭ್ಯರ್ಥಿಗಳಿಗೂ ಸಹ ಈ ಮೀಸಲಾತಿ ಸೌಲಭ್ಯ ದೊರೆಯಲಿದೆ.