ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು 10 ದಿನ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಶ್ರೀಕಿ, ಸುನಿಲ್ ಹೆಗಡೆ ಮತ್ತು ರಾಬಿನ್ ಖಂಡೇಲವಾಲ್ ಅವರನ್ನು 10 ದಿನ ಇಡಿ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಮಣಿ ಅವರು ಮೂವರು ಆರೋಪಿಗಳನ್ನು ಇಡಿ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿಗಳನ್ನು ಶನಿವಾರ ಬೆಳಗ್ಗೆ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನ್ಯಾಯಾಧೀಶರ ಗೃಹ ಕಚೇರಿಯಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಶ್ರೀಕಿ ಪರ ವಕೀಲರು ವೈದ್ಯಕೀಯ ದಾಖಲೆ ಸಲ್ಲಿಸಿ ಆರೋಪಿಯ ಮಾನಸಿಕ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ಕೋರಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು ಇಡಿ ವಶಕ್ಕೆ ಒಪ್ಪಿಸಿದ್ದಾರೆ.
ಇಡಿ ಕರ್ನಾಟಕ ಸರ್ಕಾರದ ಇ- ಪ್ರೊಕ್ಯೂರ್ಮೆಂಟ್ ಪೋರ್ಟಲ್ ನಿಂದ 11.5 ಕೋಟಿ ರೂ. ಕದ್ದಿರುವುದು, ಭಾರತದ ಗೇಮಿಂಗ್ ವೆಬ್ಸೈಟ್ ಗಳ ಹ್ಯಾಕಿಂಗ್ ಮತ್ತು ವಿದೇಶದಲ್ಲಿ ಕ್ರಿಪ್ಟೋ ಕರೆನ್ಸಿ ಬದಲಾವಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ. ಇತ್ತೀಚೆಗೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮನೆಯಲ್ಲಿಯೂ ಇಡಿ ಶೋಧ ನಡೆಸಿತ್ತು.