ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ ನೀಡಿದ್ದಾರೆ.
ಲೋಕಭವನಕ್ಕೆ ತೆರಳಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಹಾಗೂ ಸಚಿವ ಸಂಪುಟ ಸದಸ್ಯರು ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಶರ್ಮಾ ಹಾಗೂ ಸಂಪುಟ ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೂಚಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಅಸ್ಸಾಂ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 12ರಂದು ನಡೆಯುವ ಸಾಧ್ಯತೆಯಿದೆ. ಎನ್ ಡಿಎ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿಮಂತ್ ಬಿಸ್ವಾ ಶರ್ಮಾ ಅವರೇ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ದಿನಾಂಕವನ್ನು ಕೇಂದ್ರ ವೀಕ್ಷಕ ಜೆಪಿ ನಡ್ಡಾ ನಿರ್ಧರಿಸಲಿದ್ದಾರೆ. ಈ ಸಭೆಯಲ್ಲಿ ಮುಂದಿನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಸಭೆಯಲ್ಲಿ ಘೋಷಿಸಿದ ನಾಯಕರು ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.