ಬೆಂಗಳೂರು: ಕಾವೇರಿ ನದಿ ನೀರು ವಿಚಾರಕ್ಕೆ ಸಂಂಬಂಧಿಸಿದಂತೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರಿನಂತೆ 15 ದಿನಗಳವರೆಗೆ 4 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಖಂಡಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಆರಂಭವಾಗಿದೆ. ಮುಂಗಾರು ಕೈಕೊಟ್ಟು, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ನೀಡಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದರು.
ಹಾಗೊಂದುವೇಳೆ ತಮಿಳುನಾಡಿಗೆ ಒಂದು ಹನಿ ನೀರು ಹರಿದರೂ 1991ರ ಮಾದರಿಯ ಕಾವೇರಿ ಸಂಘರ್ಷ ಮತ್ತೆ ನಡೆಸಬೇಕಾಗುತ್ತದೆ. ಅಂತಹ ಸ್ಥಿತಿಯನ್ನು ಸರ್ಕಾರ ಮತ್ತೆ ತರಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಜನರ ಹಿತ ಬಲಿ ಕೊಟ್ಟು ತಮಿಳುನಾಡಿಗೆ ನೀರು ಬಿಟ್ಟರೆ 1991ರ ಮಾದರಿಯಲ್ಲೇ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ. ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ತಿಳಿಸಿದ್ದಾರೆ.
ಸಿಡಬ್ಲ್ಯುಆರ್ಸಿ ನೇರವಾಗಿ ಆದೇಶಿಸುವ ಬದಲು ಕಾವೇರಿ ಜಲಾನಯನ ಪ್ರದೇಶಕ್ಕೆ ಸಮಿತಿ ಕಳುಹಿಸಿ, ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಆದೇಶ ನೀಡಬೇಕಿತ್ತು. ಮಳೆ ಇಲ್ಲದೆ ಮಂಡ್ಯ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ತಮಿಳುನಾಡು ಕೇಂದ್ರದ ಮೇಲೆ ಒತ್ತಡ ತಂದು ಪದೇ ಪದೇ ನೀರು ಪಡೆಯಲು ಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದರು.