ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡಿದೆ. ಈ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಬೆಂಗಳೂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಇದೀಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನೇಮಕಾತಿ ವಿಚಾರದಲ್ಲಿ ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್ಗೂ ಸೂಚಿಸಲಾಗಿದೆ. ಕಂದಾಯ ಇಲಾಖೆಗಳಿಗೂ ನೇಮಕಾತಿಗೆ ಸೂಚಿಸಲಾಗಿದೆ. ಅದೇ ರೀತಿ ಶಿಕ್ಷಕರು, ವೈದ್ಯರು, ನರ್ಸ್ ಗಳು, ಇಂಜಿನಿಯರ್ಸ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ವಿಳಂಬ ಮಾಡದೇ ನೇಮಕಾತಿಗೆ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ ಎಂದರು.
ನೇಮಕಾತಿ ನಿಟ್ಟಿನಲ್ಲಿಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಉಮಾಮಹದೇವನ್ ಹಾಗೂ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ಉದ್ದೇಶವೇನೆಂದರೆ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರಿದ್ದಾರೆ. ಅವರೆಲ್ಲರೂ ಹಲವು ಸಂದರ್ಭಗಳಲ್ಲಿ ಬೀದಿಗಿಳಿದು ನೇಮಕಾತಿಗಾಗಿ ಹೋರಾಟ ನಡೆಸಿದ್ದಾರೆ. ಹಾಗಾಗಿ ನಾವು ತಕ್ಷಣ 72,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.