ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ 2025 -26 ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್ ಗೆ 7721 ರೂ. ದರದಲ್ಲಿ ಸಚಿವ ಶಿವಾನಂದ ಪಾಟೀಲ್ ಆದೇಶಿಸಿದ್ದಾರೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕಲಬುರಗಿ, ಗದಗ, ವಿಜಯಪುರ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶಿಸಿದ್ದಾರೆ.
ನಾಫೆಡ್ ಮತ್ತು ಎನ್.ಸಿ.ಸಿ.ಎಫ್. ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ, ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಲವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ.
ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನ ಖರೀದಿ ಆರಂಭ
2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ. 7,721 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 50 ದಿನಗಳವರೆಗೆ ಅಂದರೆ ಮೇ 7, 2026 ರಿಂದ ಜೂನ್ 25, 2026 ರವರೆಗೆ ಹಾಗೂ ಉತ್ಪನ್ನ ಖರೀದಿಸಲು 60 ದಿನಗಳವರೆಗೆ ಅಂದರೆ ಮೇ 7, 2026 ರಿಂದ ಜುಲೈ 5, 2026 ರವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೂರ್ಯಕಾಂತಿ ಖರೀದಿ ಕೇಂದ್ರಗಳ ವಿವರ: ಕುಂದಗೋಳ ತಾಲೂಕಿನ ಯರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ನಿ) ದಿಂದ ಕುಂದಗೋಳ ಎ.ಪಿ.ಎಮ್.ಸಿ (ದೂ. ಸಂ:9901583895), ಹಿರೇಹರಕುಣಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ನಿ) ದಿಂದ ಹಿರೇಹರಕುಣಿ (ದೂ. ಸಂ:9844198169), ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ನಿ) ದಿಂದ ಶಿರಗುಪ್ಪಿ (ದೂ. ಸಂ:9538696718) ಹಾಗೂ ನವಲಗುಂದ ತಾಲೂಕಿನ ಶಿರೂರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ನಿ) ದಿಂದ ಶಿರೂರ (ದೂ. ಸಂ:9611498476) ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉತ್ಪನ್ನವನ್ನು ಖರೀದಿಸಲು ಅಗತ್ಯವಿರುವ ದಾಖಲೆಗಳು: ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ, ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ.
ಸೂರ್ಯಕಾಂತಿ ಖರೀದಿಸಲು ಅನುಸರಿಸುವ ಕ್ರಮಗಳು: ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ.9 ಕ್ಕಿಂತ ಕಡಿಮೆ ಇರಬೇಕು. ಸೂರ್ಯಕಾಂತಿ ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು. ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು. ರೈತರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ನೀಡುವ ಗೋಣಿ ಚೀಲದಲ್ಲಿ 50 ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಸೂರ್ಯಕಾಂತಿ ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಟ 20 (ಇಪ್ಪತ್ತು) ಕ್ವಿಂಟಾಲ್ವರೆಗೆ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ಗೆ ರೂ. 7,721 ರಂತೆ ಸೂರ್ಯಕಾಂತಿಯನ್ನು ಖರೀದಿಸಲಾಗುವುದು.
ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು (ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆಓಎಫ್)) ಹುಬ್ಬಳ್ಳಿ (ದೂರವಾಣಿ ಸಂಖ್ಯೆ:7975282932, 9900553956) ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.