ಕೊಪ್ಪಳ: ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪಳ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ(KRIDL) ಕಾರ್ಯನಿರ್ವಾಹಕ ಎಂಜಿನಿಯರ್ ಜರಣಪ್ಪ ಎಂ. ಚಿಂಚೋಳಿಕರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಇಲಾಖೆಯಲ್ಲಿ ಗ್ರೂಪ್ ಲೀಡರ್ ಆಗಿದ್ದ ದೇವರಾಜ ರೇಷ್ಮೆ ಎಂಬುವರನ್ನು ಕೂಡ ಬಂಧಿಸಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭ್ರಷ್ಟಾಚಾರದ ಬೆಳಕಿಗೆ ಬಂದ ಬಳಿಕ ಸರ್ಕಾರ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದಲ್ಲಿ ಬೆಂಗಳೂರು ಮತ್ತು ಕೊಪ್ಪಳ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಜರಣಪ್ಪ ಎಂ. ಚಿಂಚೋಳಿಕರ ವಿರುದ್ಧ ಯಲಬುರ್ಗಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಕಾರ್ಯನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿದ ಆರೋಪ ಸಾಬೀತಾಗಿದೆ. ಎರಡು ವರ್ಷಗಳ ಹಿಂದೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿತ್ತು. ನಂತರ ಸೇವೆಯಿಂದಲೂ ವಜಾಗೊಳಿಸಲಾಗಿತ್ತು.
ಯಲಬುರ್ಗಾ ಕ್ಷೇತ್ರದಲ್ಲಿ 2016-18ರ ಅವಧಿಯಲ್ಲಿ ಸುವರ್ಣ ಗ್ರಾಮ ಯೋಜನೆ ಕಾಮಗಾರಿಗಳನ್ನು ನಿರ್ವಹಿಸದೆ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ 2020ರಲ್ಲಿ ದೂರು ನೀಡಿದ್ದರು. ಈ ದೂರಿನ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿನ ಎಂಜಿನಿಯರಿಂಗ್ ಗಳ ಅಧ್ಯಕ್ಷತೆಯಲ್ಲಿ ಪಂಚನಾಮೆ ಸಮಿತಿ ರಚಿಸಲಾಗಿತ್ತು. ಲೋಕಾಯುಕ್ತ ಪೊಲೀಸರು ಜರಣಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ಪ್ರಕರಣ ಸೇರಿದಂತೆ KRIDL ನಲ್ಲಿ ನಡೆದ 78 ಕೋಟಿ ರೂ. ಮೊತ್ತದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.