ಬೆಂಗಳೂರು : ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್ನಿಂದ 25 ಲಕ್ಷ ರೂಪಾಯಿ ನಗದು ಡ್ರಾ ಮಾಡಿ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಈ ವಿಷಯವನ್ನು ಗಮನಿಸಿದ್ದ ದಂಪತಿ, ಹಣವನ್ನು ಕಳವು ಮಾಡುವ ಸಂಚು ರೂಪಿಸಿ, ಸೂಕ್ತ ಸಮಯದಲ್ಲಿ ನಗದನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದರು.
ತನಿಖೆಯಲ್ಲಿ ಆರೋಪಿಗಳು ಮನೆಗೆ ಕೆಲಸಕ್ಕೆ ಸೇರುವ ಮೊದಲೇ ಕಳ್ಳತನದ ಉದ್ದೇಶ ಹೊಂದಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿನ ಹಣದ ವ್ಯವಹಾರ ಹಾಗೂ ನಗದು ಇಡುವ ಸ್ಥಳದ ಕುರಿತು ಮಾಹಿತಿ ಸಂಗ್ರಹಿಸಿ ಕೃತ್ಯ ಎಸಗಿರುವುದು ತಿಳಿದುಬಂದಿದೆ.
ಪ್ರಕರಣ ಬೆಳಕಿಗೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಮೃತಹಳ್ಳಿ ಪೊಲೀಸರು, ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಲ್ಲದೆ, ಕಳುವಾಗಿದ್ದ 25 ಲಕ್ಷ ರೂಪಾಯಿ ನಗದನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.