ಮಂಗಳೂರು: ಕರಾವಳಿಗರ ಬಹುದಿನಗಳ ಬೇಡಿಕೆ ಹಾಗೂ ನಿರಂತರ ಹೋರಾಟಕ್ಕೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಈ ಐತಿಹಾಸಿಕ ತೀರ್ಮಾನವನ್ನು ಅಧಿಕೃತವಾಗಿ ಪ್ರಕಟಿಸಿದರು.
ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಆನೆಬಲ
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಅತ್ಯಂತ ಪ್ರಾಚೀನ ಇತಿಹಾಸ ಹಾಗೂ ಶ್ರೀಮಂತ ಮೌಖಿಕ ಮತ್ತು ಲಿಖಿತ ಸಾಹಿತ್ಯ ಸಂಪ್ರದಾಯವನ್ನು ಹೊಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಬಳಕೆಯಲ್ಲಿರುವ ತುಳುವಿಗೆ ರಾಜ್ಯ ಮಟ್ಟದಲ್ಲಿ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ಸಿಕ್ಕಿರುವುದು, ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಲವಾದ ವೇದಿಕೆಯನ್ನು ಕಲ್ಪಿಸಿಕೊಡಲಿದೆ.
ಮೋಹನ್ ಆಳ್ವ ಸಮಿತಿ ವರದಿ ಆಧರಿಸಿ ತೀರ್ಮಾನ
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಒದಗಿಸುವ ಕುರಿತ ಸಾಧಕ-ಬಾಧಕಗಳ ಪರಿಶೀಲನೆಗೆ ಖ್ಯಾತ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿತ್ತು. ನೆರೆಹೊರೆಯ ರಾಜ್ಯಗಳ ಭಾಷಾ ನೀತಿಗಳು ಹಾಗೂ ಕಾನೂನಾತ್ಮಕ ಅಂಶಗಳನ್ನು ಆಳವಾಗಿ ಅಧ್ಯಯನ ನಡೆಸಿದ್ದ ಈ ಸಮಿತಿಯು, ಸರ್ಕಾರಕ್ಕೆ ವಿಸ್ತೃತ ವರದಿಯನ್ನು ನೀಡಿತ್ತು.
ಕರಾವಳಿಯ ತುಳು ಸಾಹಿತ್ಯ ಅಕಾಡೆಮಿ, ಸಾಹಿತಿಗಳು, ತುಳು ಒಕ್ಕೂಟಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ವರ್ಷಗಳಿಂದ ನಡೆಸಿಕೊಂಡು ಬಂದ ಸತತ ಹೋರಾಟಕ್ಕೆ ಈ ಮೂಲಕ ಮುಕ್ತಿ ಸಿಕ್ಕಂತಾಗಿದ್ದು, ಕರಾವಳಿ ಜನತೆಯಲ್ಲಿ ಸಂಭ್ರಮ ಮನೆಮಾಡಿದೆ.