ಬೆಂಗಳೂರು: ಕಾಂಗ್ರೆಸ್ ಬಳಿಕ ವಿಪಕ್ಷ ಬಿಜೆಪಿಯಲ್ಲಿಯೂ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ದೊರೆತಿದೆ.
ಬಿಜೆಪಿಯ ಆಂತರಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ, ಮೇ 25 ರ ನಂತರ ಮಹತ್ವದ ಬದಲಾವ್ನೆಗಳು ಆಗಲಿವೆ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ, ಬಹುದಿನಗಳಿಂದ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆಬೀಳುವ ನಿರೀಕ್ಷೆ ಇದೆ. ಹೈಕಮಾಂಡ್ ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ರಾಅಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆಗಳು ಇವೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಬಿ.ಎಸ್ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಇಡೀ ರಾಜ್ಯದ ಮಠಾಧಿಪತಿಗಳು ಒಂದೇ ವೇದಿಕೆಗೆ ಬರಲು ಬಿಎಸ್ವೈ ಅವರೇ ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದರು. ಇದು ಪರೋಕ್ಷವಾಗಿ ವಿಜಯೇಂದ್ರ ಅವರಿಗೆ ನೈತಿಕವಾಗಿ ದೊಡ್ಡ ಶಕ್ತಿ ತುಂಬಿದೆ ಎನ್ನಲಾಗಿದೆ.
ರಾಜ್ಯ ಬಿಜೆಪಿಯಕೋರ್ ಕಮಿಟಿ ಶೀಘ್ರದಲ್ಲೇ ಪುನಾರಚನೆಗೊಳ್ಳಲಿದ್ದು, ಹಾಲಿ ಇರುವ ಇಬ್ಬರು ಪ್ರಮುಖ ಸದಸ್ಯರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮನ್ನಣೆ ನೀಡುವ ಸಾಧ್ಯತೆ ಇದೆ.
ಚಿತ್ರದುರ್ಗದ ಸಮಾವೇಶವು ಕೇವಲ ಬಿಎಸ್ವೈ ಅಭಿಮಾನೋತ್ಸವ ಎಂದು ವಿಜಯೇಂದ್ರ ಸ್ಪಷ್ಟಪಡಿಸುತ್ತಿದ್ದರೂ, ಇದು ಪರೋಕ್ಷವಾಗಿ ಯಡಿಯೂರಪ್ಪ ಅವರ ಶಕ್ತಿ ಪ್ರದರ್ಶನ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಈ ಅಭೂತಪೂರ್ವ ಯಶಸ್ಸಿನ ಬಳಿಕ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಜೊತೆಗೆ ಸಂಘ ಪರಿವಾರದಲ್ಲೂ ಮೃಧು ಧೋರಣೆ ಮೂಡಿದೆ.
ಮತ್ತೊಂದೆಡೆ, ಪುನಾರಚನೆಗೊಳ್ಳಲಿರುವ ಕೋರ್ ಕಮಿಟಿ ಸೇರಲು ಬಿಜೆಪಿಯ ಹಿರಿಯ ನಾಯಕರು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರು ಸಮಿತಿಯ ಸದಸ್ಯರಾಗಲು ತೀವ್ರ ಉತ್ಸುಕತೆ ಹೊಂದಿದ್ದಾರೆ. ಇದರೊಂದಿಗೆ ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಅವರ ಹೆಸರೂ ಸಹ ಮುಂಚೂಣಿಯಲ್ಲಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿಯಲ್ಲಿ ಹೈಕಮಾಂಡ್ ತೆಗೆದುಕೊಳ್ಳಲಿರುವ ಈ ನಿರ್ಧಾರಗಳು ತೀವ್ರ ಕುತೂಹಲ ಮೂಡಿಸಿವೆ.