ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಆಗಸ್ಟ್ 31ರೊಳಗೆ ನಡೆಸಲೇಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಇದುವೇ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಲು ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಖಡಕ್ ಎಚ್ಚರಿಕೆ ನೀಡಿದೆ.ಈ ತೀರ್ಪಿನೊಂದಿಗೆ ಜೂನ್ 30ರೊಳಗೆ ನಡೆಯಬೇಕಿದ್ದ ಜಿಬಿಎ ಚುನಾವಣೆಗಳು ಮತ್ತೆ ಮುಂದೂಡಲ್ಪಟ್ಟಿವೆ.
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದು ಮತ್ತು ಚುನಾವಣಾ ಕರ್ತವ್ಯಕ್ಕೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯಿರುವ ಕಾರಣ, ಚುನಾವಣೆ ನಡೆಸಲು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ರಾಜ್ಯ ಸರ್ಕಾರವು ರಾಜ್ಯ ಚುನಾವಣಾ ಆಯೋಗದ ಮೂಲಕ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿತ್ತು.
ನ್ಯಾಯಾಲಯದ ಖಡಕ್ ಎಚ್ಚರಿಕೆ: ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಸರ್ಕಾರದ ಮನವಿಯನ್ನು ಪರಿಶೀಲಿಸಿತು. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಸೆಪ್ಟೆಂಬರ್ ಅಂತ್ಯದವರೆಗೆ ಗಡುವು ನೀಡಬೇಕೆಂಬ ಸರ್ಕಾರದ ಬೇಡಿಕೆಯನ್ನು ನ್ಯಾಯಾಲಯ ಸ್ಪಷ್ಟವಾಗಿ ತಿರಸ್ಕರಿಸಿತು. ಆಯೋಗಕ್ಕೆ ಒಂದು ತಿಂಗಳು ಮತ್ತು ಸರ್ಕಾರಕ್ಕೆ ಒಂದು ತಿಂಗಳು ಸೇರಿ ಒಟ್ಟು ಎರಡು ತಿಂಗಳ ಕಾಲಾವಕಾಶವನ್ನು ಮಾತ್ರ ನೀಡಲಾಗಿದ್ದು, ಯಾವುದೇ ನೆಪವೊಡ್ಡದೇ ಆಗಸ್ಟ್ 31ರೊಳಗೆ ಚುನಾವಣೆ ನಡೆಸಲೇಬೇಕೆಂದು ಪೀಠವು ಸೂಚನೆ ನೀಡಿದೆ.ಈ ಮೂಲಕ ಸುಪ್ರೀಂ ಕೋರ್ಟ್ ಜಿಬಿಎ ಚುನಾವಣೆ ಕುರಿತಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.