ಬೆಂಗಳೂರು: ರಾಜ್ಯದ ಹಲವೆಡೆ ವರುಣಾರ್ಭಟ ಜೋರಾಗಿದ್ದರೆ, ಮತ್ತೆ ಹಲವೆಡೆ ಬಿಸಿಲ ಝಳ ಹೆಚ್ಚುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಸುರಿದ ಗುಡುಗು ಸಹಿತ ಬಿರುಗಾಳಿ, ಮಳೆಗೆ ಈವರೆ 6 ಜನರು ಸಾವನ್ನಪ್ಪಿದ್ದಾರೆ. ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆ ಅನಾಹುತಕ್ಕೆ ಆರು ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಅನಾಅಹುತ ಸಂಭವಿಸಿದೆ. ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮತಪಟ್ಟಿದ್ದಾರೆ.
ಮೋರಟಗಿ ಗ್ರಾಮದ ಗುರುನಾಥ ಬಡಿಗೇರ(35), ಜ್ಯೋತಿ ಬಡಿಗೇರ(28), ಮಕ್ಕಳಾದ ಕಾಳಮ್ಮ ಬಡಿಗೇರ(13), ಕೀರ್ತಿ ಬಡಿಗೇರ(9) ಮೃತ ದುರ್ದೈವಿಗಳು. ಬಿರುಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಅವಾಂತರಗಳು ಸಂಭವಿಸಿವೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯಲ್ಲಿ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆ, ಸಿಡಿಲಬ್ಬರಕ್ಕೆ ಯುವಕನೊಬ್ಬ ಬಲಿಯಾಗಿದ್ದಾರೆ. ಜರೇಕಟ್ಟೆ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಅಜಿತ್ (19) ಎಂಬ ಯುವಕ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಅದೃಷ್ಟವಶಾತ್ ರಜೆ ಇದ್ದ ಕಾರಣ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಥಣಿಯ ಸಂಬರಗಿಯಲ್ಲಿ ಬಿರುಗಾಳಿಗೆ ಐದು ಮನೆಗಳ ಮೇಲ್ಛಾವಣಿ ಕುಸಿದು ದವಸ ಧಾನ್ಯಗಳು ನಾಶವಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಅಟದಲ್ಲಿ ವ್ಯತ್ಯಯವಾಗಿದೆ. ರನ್ವೇ ಸ್ಪಷ್ಟವಾಗಿ ಕಾಣಿಸದ ಕಾರಣ ಬೆಂಗಳೂರಿನಿಂದ ಬಂದಿದ್ದ ಏರ್ ಇಂಡಿಯಾದ ಎರಡು ವಿಮಾನಗಳು ಸುಮಾರು ಹೊತ್ತು ಆಗಸದಲ್ಲೇ ಗಿರಕಿ ಹೊಡೆದಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಇಜಾರಿಲಕಮಾಪುರದಲ್ಲಿ ಅಲೆಮಾರಿಗಳ ಗುಡಿಸಲುಗಳು ಗಾಳಿಗೆ ಹಾರಿಹೋಗಿವೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ಸಂಚಾರ ಸಂಪೂರ್ಣ ಬಂದ್ ಸ್ಥಗಿತಗೊಂಡಿದೆ. ಉತ್ತರ ಕನ್ನಡದ ಭಟ್ಕಳ ಮತ್ತು ಹೊನ್ನಾವರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಹವಾಮಾನ ಇಲಾಖೆ ಸೂಚನೆ ಪ್ರಕಾರ ರಾಜ್ಯದಲ್ಲಿ ಮೇ 17ರವರೆಗೆ ಭಾರಿ ಮಳೆಯಾಗಲಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.