ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಹಬ್ಬದ ವೇಳೆ ಹೋರಿ ಓಡಿಸುವ ಸಂಪ್ರದಾಯದ ಸಂದರ್ಭದಲ್ಲಿ ನಡೆದ ವಿವಾದ ಭೀಕರ ಕೋಮು ಘರ್ಷಣೆಗೆ ತಿರುಗಿದೆ. ಮಸೀದಿ ಬಳಿ ಪಟಾಕಿ ಸಿಡಿಸಿದ ವಿಚಾರವಾಗಿ ಆರಂಭವಾದ ವಾಗ್ವಾದ ಮಾರಾಮಾರಿಗೆ ಕಾರಣವಾಗಿ, ಇಬ್ಬರ ಕೈ ಕತ್ತರಿಸಲ್ಪಟ್ಟಿದ್ದು, ಒಟ್ಟು 8 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಪ್ರತಿ ವರ್ಷದಂತೆ ಸೋಮವಾರವೂ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಹೋರಿ ಓಡಿಸುವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ರೈತರು ತಮ್ಮ ಎತ್ತುಗಳನ್ನು ಓಡಿಸುತ್ತಿದ್ದಾಗ ಮಸೀದಿ ಸಮೀಪ ಪಟಾಕಿ ಸಿಡಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಾಷಾಸಾಬ ಗೌಂಡಿ, “ಮಸೀದಿ ಬಳಿ ಏಕೆ ಪಟಾಕಿ ಸಿಡಿಸುತ್ತೀರಿ?” ಎಂದು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಎರಡೂ ಗುಂಪಿನವರ ನಡುವೆ ಮಾತಿನ ಚಕಮಕಿ ನಡೆದಿದೆ. ವಿವಾದ ತೀವ್ರಗೊಂಡು ಹೋರಿ ಹಿಂದೆ ಬರುತ್ತಿದ್ದ ಲೋಹಿತ್ ಜಯಪ್ಪ ಎಂಬುವರ ಮೇಲೆ ಹಲ್ಲೆ ನಡೆದಿದೆ. ಇದರಿಂದ ಉದ್ವಿಗ್ನಗೊಂಡ ಮತ್ತೊಂದು ಗುಂಪು ಕುಡುಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ಪ್ರತಿದಾಳಿ ನಡೆಸಿದ ಪರಿಣಾಮ ಘರ್ಷಣೆ ಉಂಟಾಗಿದೆ.
ಈ ಘಟನೆಯಲ್ಲಿ ಶಿವರಾಜ್ ಕುರುಬರ (27), ನಾಗಪ್ಪ ಹನುಮಂತಪ್ಪ ಕುರುಬರ (34), ಮಲ್ಲಪ್ಪ ರಾಯಪ್ಪ ಕೊಡಸಂಗಿ (30), ನಿಂಗರಾಜ ಮಹಾಂತೇಶ ಕುರುಬರ (30), ಜಯಪ್ಪ ಸಂಗಪ್ಪ ಕುರುಬರ (20), ಲೋಹಿತ್ ರೇವಣಪ್ಪ ಕುರುಬರ (24), ಬಾಷಾಸಾಬ ಗೌಂಡಿ (55) ಹಾಗೂ ಖಾಜಾ ಗೌಂಡಿ (18) ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಶಿವರಾಜ್ ಕುರುಬರ, ಜಯಪ್ಪ ಕುರುಬರ ಹಾಗೂ ಲೋಹಿತ್ ಕುರುಬರ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರ ಕೈ ಕತ್ತರಿಸಲ್ಪಟ್ಟಿದೆ. ಉಳಿದ ಗಾಯಾಳುಗಳು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ನರೇಗಲ್ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.