ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ನಿಂದ ಕೆಳಗಿನ ಅಂಡರ್ಪಾಸ್ಗೆ ಹಾರಿಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ಮೂಲದ ಮಹಿಳಾ ಸಾಫ್ಟ್ವೇರ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಮಹಿಳೆಯನ್ನು ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಅಂಜನಾ (32) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆಕೆಯ ಪತಿ ಹರೀಶ್ ಹಾಗೂ ಕಾರು ಚಾಲಕ ನಿತಿನ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ?
ಅಂಜನಾ ಅವರು ತಮ್ಮ ಪತಿ ಹರೀಶ್ ಅವರೊಂದಿಗೆ ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್ಪ್ರೆಸ್ವೇ ಫ್ಲೈಓವರ್ ಮೇಲೆ ವೇಗವಾಗಿ ಸಾಗುತ್ತಿದ್ದಾಗ, ಚಾಲಕ ನಿತಿನ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಫ್ಲೈಓವರ್ ಮೇಲಿಂದ ನೇರವಾಗಿ ಕೆಳಗಿನ ಅಂಡರ್ಪಾಸ್ ರಸ್ತೆಗೆ ಹಾರಿಬಿದ್ದಿದೆ.
ಕಿಟಕಿಯಿಂದ ಹೊರಕ್ಕೆ ಹಾರಿಬಿದ್ದಿದ್ದ ಟೆಕ್ಕಿ
ಕಾರು ಮೇಲಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಕಿಟಕಿಯ ಗಾಜು ಒಡೆದು ಅಂಜನಾ ಹೊರಕ್ಕೆ ಎಸೆಯಲ್ಪಟ್ಟಿದ್ದರು. ಅವರ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿತ್ತು. ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಪತ್ನಿಯನ್ನು ಕಂಡು ಪತಿ ಹರೀಶ್ ಕಣ್ಣೀರಿಟ್ಟು ಗೋಳಾಡಿದ್ದರು. ಸ್ಥಳೀಯರ ನೆರವಿನಿಂದ ಪೊಲೀಸರು ತಕ್ಷಣವೇ ಅಂಜನಾ ಸೇರಿದಂತೆ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಅಂಜನಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ ಪತಿ ಹರೀಶ್ ಹಾಗೂ ಚಾಲಕ ನಿತಿನ್ಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.