ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ಸಿಲುಕಿದ್ದ ನಾಲ್ವರು ಪ್ರಮುಖ ಪೊಲೀಸ್ ಅಧಿಕಾರಿಗಳಿಗೆ ಗೃಹ ಇಲಾಖೆ ಬಿಗ್ ರಿಲೀಫ್ ನೀಡಿದೆ. ಆರೋಪಿ ಅಧಿಕಾರಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಗೃಹ ಇಲಾಖೆಯು ಪೂರ್ವಾನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಸಿಐಡಿ, ಎಸ್ಐಟಿ ಅಧಿಕಾರಿಗಳು ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಸಿ ಅಧಿಕಾರಿಗಳನ್ನು ಪ್ರಕರಣದಿಂದ ಕೈಬಿಟ್ಟಿದ್ದಾರೆ.
ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ,ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಾಧರ್, ಡಿ.ಎಂ. ,ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ಸಿಐಡಿ ಎಸ್ಐಟಿ ನಡೆಸುತ್ತಿದ್ದ ತನಿಖೆಯ ಚಾರ್ಜ್ಶೀಟ್ನಿಂದ ಮುಕ್ತಿ ಪಡೆದುಕೊಂಡಿದ್ದಾರೆ.
2020-21ರಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಬಿಟ್ ಕಾಯಿನ್ ಹಗರಣದಲ್ಲಿ, ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಂಬಾತನನ್ನು ಅಕ್ರಮ ಬಂಧನದಲ್ಲಿಟ್ಟು, ಆತನ ಮೂಲಕ ಬಿಟ್ಕಾಯಿನ್ ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಈ ಅಧಿಕಾರಿಗಳ ಮೇಲಿತ್ತು. ಈ ಅಧಿಕಾರಿಗಳು ಸೈಬರ್ ತಜ್ಞ ಸಂತೋಷ್ ಕುಮಾರ್ ಜೊತೆ ಶಾಮೀಲಾಗಿ, ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಎಂಬುವರ ಕ್ರಿಪ್ಟೋ ವ್ಯಾಲೆಟ್ಗಳನ್ನು ದುರ್ಬಳಕೆ ಮಾಡಿಕೊಂಡಿದ್ದರು. ಈ ಮೂಲಕ ಬರೋಬ್ಬರಿ 1 ಕೋಟಿ 83 ಲಕ್ಷದ 624 ರೂಪಾಯಿ ಮೌಲ್ಯದ ಬಿಟ್ಕಾಯಿನ್ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಎಸ್ಐಟಿ ತನಿಖೆ ನಡೆಸಿತ್ತು.
ಇದೀಗ ಗೃಹ ಇಲಾಖೆ ಯಾವುದೇ ಸರ್ಕಾರಿ ಅಧಿಕಾರಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಬೇಕಾದರೆ ಗೃಹ ಇಲಾಖೆಯ ಪೂರ್ವಾನುಮತಿ ಕಡ್ಡಾಯ. ಆದರೆ, ಈ ಅಧಿಕಾರಿಗಳ ವಿರುದ್ಧದ ಅಭಿಯೋಜನಾ ಮಂಜೂರಾತಿ ಪ್ರಸ್ತಾವನೆಯನ್ನು ಗೃಹ ಇಲಾಖೆ ತಿರಸ್ಕರಿಸಿದೆ. ಅನುಮತಿ ಸಿಗದ ಕಾರಣ ಸಿಐಡಿ ಎಸ್ಐಟಿ ಅನಿವಾರ್ಯವಾಗಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿ, ನಾಲ್ಕೂ ಜನ ಅಧಿಕಾರಿಗಳನ್ನುಚಾರ್ಜ್ ಶೀಟ್ ಪಟ್ಟಿಯಿಂದ ಕೈಬಿಟ್ಟಿದೆ.
ನಾಲ್ವರು ಪೊಲೀಸ್ ಅಧಿಕಾರಿಗಳು ಹಗರಣದಿಂದ ಬಚಾವಾಗಿದ್ದರೂ, ಪ್ರಕರಣದ ಎ1 ಆರೋಪಿಯಾಗಿರುವ ಸೈಬರ್ ತಜ್ಞ ಸಂತೋಷ್ ಕುಮಾರ್ ವಿರುದ್ಧ ಎಸ್ಐಟಿ ತನಿಖೆ ಮುಂದುವರಿಸಿದೆ. ರಾಬಿನ್ ಖಂಡೇವಾಲ ವ್ಯಾಲೆಟ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್ಕಾಯಿನ್ ಅನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವುದು, ವಂಚನೆ ಎಸಗಿರುವುದು ಹಾಗೂ ಸಾಕ್ಷ್ಯಾಧಾರಗಳನ್ನು ತಿರುಚಿರುವುದಕ್ಕೆ ಸಂಬಂಧಿಸಿದಂತೆ ಸಂತೋಷ್ ವಿರುದ್ಧ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.