ಬೆಂಗಳೂರು : ಜಿಬಿಎ (GBA) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು 2026ರ ಡಿಸೆಂಬರ್ 31ರೊಳಗೆ ಕಡ್ಡಾಯವಾಗಿ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ವಿಚಾರಣೆ ನಡೆಸಿ, ಚುನಾವಣೆ ಮುಂದೂಡಲು ಯಾವುದೇ ನೆಪ ಅಥವಾ ಹೊಸ ಕಾರಣಗಳನ್ನು ಮುಂದಿಡಬಾರದು ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರವು ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ಕೋರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀಡಿರುವ ಗಡುವಿನೊಳಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಹಾಗೂ ಬಳಿಕ ಮತ್ತೊಂದು ಕಾರಣ ನೀಡಿ ಮುಂದೂಡುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ.
ಈ ವೇಳೆ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ನಿಗದಿತ ಗಡುವಿನ ಬಳಿಕವೂ ಚುನಾವಣೆ ನಡೆಸದಂತಹ ಪರಿಸ್ಥಿತಿ ಎದುರಾದರೆ, “ಅಂತಹ ಸಂದರ್ಭ ಬಂದರೆ ನಾವು ಸರ್ಕಾರದ ಪರ ಹಾಜರಾಗುವುದಿಲ್ಲ” ಎಂದು ನ್ಯಾಯಾಲಯದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಸುಪ್ರೀಂಕೋರ್ಟ್ನ ಈ ನಿರ್ದೇಶನದೊಂದಿಗೆ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಇದ್ದ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ಸಿದ್ಧತೆಗಳನ್ನು ತ್ವರಿತಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿ.31ರೊಳಗೆ ನಡೆಸುವಂತೆ ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಹಾಗೂ ಜಿಬಿಎ ಮನವಿ ಸಲ್ಲಿಸಿತ್ತು.. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಗತಿಯಲ್ಲಿರುವ ಕಾರಣ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವುದು ಕಷ್ಟಕರವೆಂದು ವಾದಿಸಿ ಹೆಚ್ಚುವರಿ ಕಾಲಾವಕಾಶ ಕೋರಲಾಗಿತ್ತು. ಈ ಹಿನ್ನೆಲೆ ಜಿಬಿಎ (GBA) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು 2026ರ ಡಿಸೆಂಬರ್ 31ರೊಳಗೆ ಕಡ್ಡಾಯವಾಗಿ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ