ಬೆಂಗಳೂರು: ಕೋಮುಗಲಭೆ ಪ್ರಕರಣಗಳು ಸೇರಿದಂತೆ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ.
52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು 2026ರ ಮೇ 27ರಂದು ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಅಧಿಕೃತವಾಗಿ ವಾಪಸ್ ಪಡೆಯಲು ತೀರ್ಮಾನಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೋಮುಗಲಭೆ ಆರೋಪಿಗಳ ಪರ ಯು.ಟಿ.ಖಾದರ್ ಶಿಫಾರಸು ಆರೋಪ ಸಂಬಂಧ ಯು.ಟಿ.ಖಾದರ್ಗೆ ನೋಟಿಸ್ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಗೃಹ ಇಲಾಖೆ ಮತ್ತು ಅಭಿಯೋಜನೆ ಇಲಾಖೆಗೆ ನೋಟಿಸ್ ನೀಡಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಇದೇ ರೀತಿಯ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ನ ಹಿಂದಿನ ತೀರ್ಪಿಗೆ ಪ್ರಾಥಮಿಕ ದೃಷ್ಟಿಯಿಂದ ವಿರುದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಬು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ನಿರ್ದೇಶನಾಲಯಕ್ಕೆ ನೀಡಲಾದ ನೋಟಿಸ್ಗೆ ಎರಡು ವಾರಗಳೊಳಗೆ ಉತ್ತರ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಇನ್ನು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕ್ರಮಕ್ಕೆ ತಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೋರ್ಟ್ ಆದೇಶದ ಕಾಪಿ ಸಿಕ್ಕಿದ ಬಳಿಕ ಚರ್ಚೆ ಮಾಡುತ್ತೇವೆ. ಆ ಪ್ರಕರಣಗಳಲ್ಲಿ ಬಿಜೆಪಿ ನಾಯಕರ ಕೇಸ್ ಕೂಡ ಸೇರಿವೆ. ಕಾನೂನು ಮೀರಿ ನಾವು ಯಾವುದೇ ಆದೇಶವನ್ನು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲೇ ಸಂಪುಟದಲ್ಲಿ ನಿರ್ಧಾರ ಮಾಡಲಾಗಿತ್ತು ಎಂದವರು ಹೇಳಿದ್ದಾರೆ.