ಬೆಂಗಳೂರು: ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಬೇರುಸಹಿತ ಕಿತ್ತೊಗೆಯಲು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಂಟ್ರೋಲ್ ರೂಂ ನೇತೃತ್ವದಲ್ಲಿ ರಾಜ್ಯಾದ್ಯಂತ ಬೃಹತ್ ವಿಶೇಷ ಕಾರ್ಯಾಚರಣೆ (ಸ್ಪೆಷಲ್ ಡ್ರೈವ್) ನಡೆಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಕಮಿಷನರೇಟ್ಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ನಡೆದ ಈ ಪರಿಶೀಲನಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ 800 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯದ 962 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 16,951 ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು, ಗ್ಯಾರೇಜ್ಗಳು ಹಾಗೂ ಕಾರ್ಖಾನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲೇ ಗರಿಷ್ಠ ಬಾಲಕಾರ್ಮಿಕರ ರಕ್ಷಣೆ!
ರಾಜಧಾನಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದ 188 ಪೊಲೀಸ್ ಠಾಣಾ ವ್ಯಾಪ್ತಿಯ 5,897 ಸ್ಥಳಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಬರೋಬ್ಬರಿ 503 ಮಕ್ಕಳನ್ನು ರಕ್ಷಿಸಲಾಗಿದೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ 18 ಮಂದಿ ಆರೋಪಿಗಳ ವಿರುದ್ಧ ಇಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 9 ಹಾಗೂ ಬೆಂಗಳೂರು ದಕ್ಷಿಣದಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ವಿಜಯಪುರ, ತುಮಕೂರು, ಕೊಪ್ಪಳದಲ್ಲೂ ಭಾರಿ ಕಾರ್ಯಾಚರಣೆ ಉತ್ತರ ಕರ್ನಾಟಕ ಹಾಗೂ ಬಯಲುಸೀಮೆ ಭಾಗಗಳಲ್ಲೂ ಗಣನೀಯ ಸಂಖ್ಯೆಯಲ್ಲಿ ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ:
-
ವಿಜಯಪುರ ಜಿಲ್ಲೆಯಲ್ಲಿ 1,156 ಸ್ಥಳಗಳ ಮೇಲೆ ದಾಳಿ ನಡೆಸಿ 72 ಮಕ್ಕಳನ್ನು ರಕ್ಷಿಸಲಾಗಿದ್ದು, 25 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಹಾಗೂ 3 ಎಫ್ಐಆರ್ ದಾಖಲಿಸಲಾಗಿದೆ.
-
ತುಮಕೂರು ಜಿಲ್ಲೆಯಲ್ಲಿ 33 ಹಾಗೂ ಕೊಪ್ಪಳ ಜಿಲ್ಲೆಯಲ್ಲಿ 27 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
-
ಕಲಬುರಗಿ ನಗರದಲ್ಲಿ 22, ಬಳ್ಳಾರಿಯಲ್ಲಿ 15, ಚಿಕ್ಕಬಳ್ಳಾಪುರ ಹಾಗೂ ಕೊಡಗಿನಲ್ಲಿ ತಲಾ ಪ್ರಕರಣಗಳು ಬೆಳಕಿಗೆ ಬಂದಿವೆ.
-
ಕೊಡಗು ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಿ, ಮಾಲೀಕರ ವಿರುದ್ಧ 2 ಎಫ್ಐಆರ್ ದಾಖಲಿಸಲಾಗಿದೆ.
-
ಮೈಸೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ, ಮಂಗಳೂರು ಹಾಗೂ ಚಿತ್ರದುರ್ಗ ಸೇರಿದಂತೆ ಬಹುತೇಕ ಕಡೆ ಹಲವು ಮಕ್ಕಳನ್ನು ರಕ್ಷಿಸಿ, ನಿಯಮ ಉಲ್ಲಂಘಿಸಿದ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ.
ಸಿಡಬ್ಲ್ಯುಸಿ ವಶಕ್ಕೆ ಮಕ್ಕಳು, ತಪ್ಪಿತಸ್ಥರ ವಿರುದ್ಧ ಕ್ರಮ
ರಕ್ಷಿಸಲ್ಪಟ್ಟ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ (CWC) ಹಸ್ತಾಂತರಿಸಲಾಗಿದ್ದು, ಹಲವೆಡೆ ಮಕ್ಕಳನ್ನು ಅವರ ಪೋಷಕರಿಗೆ ಒಪ್ಪಿಸುವ ಅಥವಾ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಕಾರ್ಮಿಕ ಇಲಾಖೆ ಹಾಗೂ ಬಾಲಕಾರ್ಮಿಕ ನಿರೀಕ್ಷಕರಿಗೆ ಮಾಹಿತಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಿಯಮಬಾಹಿರವಾಗಿ ಮಕ್ಕಳನ್ನು ದುಡಿಸಿಕೊಳ್ಳುವ ಸಂಸ್ಥೆಗಳು ಹಾಗೂ ಮಾಲೀಕರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.