ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಹಾಗೂ ಶಿಕ್ಷಣ ಪ್ರಮಾಣಪತ್ರಗಳನ್ನು ತಯಾರಿಸಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ರಾಜಾರೆಡ್ಡಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಕಾರ್ತಿಕ್ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು “ಡಿಜಿಟಲ್ ಡಿಸ್ಪೆನ್ಸ್ ಎಜುಕೇಷನ್ ಮಿಷನ್” ಹೆಸರಿನಲ್ಲಿ ಕೋರಮಂಗಲದಲ್ಲಿ ಕಚೇರಿ ತೆರೆದು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಕಾಲೇಜುಗಳಲ್ಲಿ ಪ್ರವೇಶ (Admission) ದೊರಕಿಸಿಕೊಡುವುದಾಗಿ ಹೇಳಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಪರ್ಕಿಸುತ್ತಿದ್ದರು.
ಇದಲ್ಲದೆ, ಹಲವು ಕಾಲೇಜುಗಳಲ್ಲಿ ಸೀಟುಗಳನ್ನು ಕೊಡಿಸುವುದಾಗಿ ಭರವಸೆ ನೀಡಿ ಹಣ ಸಂಗ್ರಹಿಸುತ್ತಿದ್ದ ಆರೋಪಿಗಳು, ನಕಲಿ ಅಂಕಪಟ್ಟಿ ಮತ್ತು ಶಿಕ್ಷಣ ದಾಖಲೆಗಳನ್ನು ಸೃಷ್ಟಿಸಿ ವಂಚನೆ ನಡೆಸುತ್ತಿದ್ದರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕೊರಿಯರ್ ಮೂಲಕ ಮಾರಾಟ : 30,000 ದಿಂದ 50,000 ವರೆಗೆ ನಕಲಿ ಮಾರ್ಕ್ಸ್ ಕಾರ್ಡ್ ನ್ನು ಮಾರಾಟ ಮಾಡಲಾಗುತ್ತಿದ್ದು, ಕೊರಿಯರ್ ಮೂಲಕ ಮಾರ್ಕ್ಸ್ ಕಾರ್ಡ್ ನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿತ್ತು ಎಂಬುದು ವಿಚಾರಣೆ ವೇಳೆ ಬಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕಚೇರಿಯಲ್ಲಿ ಪರಿಶೀಲನೆ ನಡೆಸಿ ಹಲವು ದಾಖಲೆಗಳು, ಕಂಪ್ಯೂಟರ್ಗಳು ಹಾಗೂ ನಕಲಿ ಪ್ರಮಾಣಪತ್ರಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ರಾಜಾರೆಡ್ಡಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪರಾರಿಯಾಗಿರುವ ಕಾರ್ತಿಕ್ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ಜಾಲದ ಮೂಲಕ ಎಷ್ಟು ವಿದ್ಯಾರ್ಥಿಗಳು ವಂಚನೆಗೆ ಒಳಗಾಗಿದ್ದಾರೆ ಹಾಗೂ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕಾಲೇಜು ಪ್ರವೇಶ ಹಾಗೂ ಶಿಕ್ಷಣ ದಾಖಲೆಗಳ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.