ನವದೆಹಲಿ: ಸಂಸತ್ ಭವನದತ್ತ ಮೆರವಣಿಗೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರ ಪ್ರತಿಭಟನೆ ಸೋಮವಾರ ತೀವ್ರಗೊಂಡು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ತಳ್ಳಾಟ-ನೂಕಾಟ ನಡೆದಿದ್ದು, ಕೆಲವರು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಮೊದಲು ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದರು. ಆದರೆ ಪರಿಸ್ಥಿತಿ ಕೈಮೀರಿದ ಬಳಿಕ ಲಾಠಿಚಾರ್ಜ್ ನಡೆಸಿ, ಬಳಿಕ ಅಶ್ರುವಾಯು ಶೆಲ್ಗಳನ್ನು ಪ್ರಯೋಗಿಸಿದರು. ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ, CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಕ್ಷದ ನಾಯಕರು ಆರೋಪಿಸಿದ್ದರು. ಪ್ರತಿಭಟನೆ ವೇಳೆ ನಡೆದ ಘರ್ಷಣೆ, ಕಲ್ಲು ತೂರಾಟ, ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಪ್ರತಿಭಟನೆ ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಆಯೋಜಿಸಲಾಗಿತ್ತು. ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಸಂಸತ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೋಮವಾರ ದೆಹಲಿಯ ಜಂತರ್ ಮಂತರ್ನಲ್ಲಿ Cockroach Janta Party (CJP) ಆಯೋಜಿಸಿದ್ದ ‘ಚಲೋ ಸಂಸತ್’ ಪ್ರತಿಭಟನಾ ಮೆರವಣಿಗೆ ವೇಳೆ ಭಾರೀ ಗದ್ದಲ ಉಂಟಾಯಿತು. ಸಂಸತ್ ಸುತ್ತಮುತ್ತ ಕಠಿಣ ಭದ್ರತೆ ಜಾರಿಗೊಳಿಸಲಾಗಿದ್ದರೆ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಇನ್ನೂ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾವಿರಾರು ಸಿಜೆಪಿ ಬೆಂಬಲಿಗರು ಜಂತರ್ ಮಂತರ್ನಲ್ಲಿ ಸೇರಿ, ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಶಿಕ್ಷಣ ಕ್ಷೇತ್ರದ ಇತರ ಸಮಸ್ಯೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಂಸತ್ ಕಡೆಗೆ ಮೆರವಣಿಗೆ ಆರಂಭಿಸಿದರು. ಈ ಪ್ರತಿಭಟನೆಯನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವ ವಹಿಸಿದ್ದರು. ಆದರೆ ದೆಹಲಿ ಪೊಲೀಸರು ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದರಿಂದ, ಸಂಸತ್ ಸುತ್ತಮುತ್ತ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪ್ರತಿಭಟನಾಕಾರರು ಸಂಸತ್ ಆವರಣದತ್ತ ಸಾಗಲು ಯತ್ನಿಸಿದಾಗ, ಹಲವು ಸ್ಥಳಗಳಲ್ಲಿ ಪೊಲೀಸರೊಂದಿಗೆ ತಳ್ಳಾಟ-ನೂಕಾಟ ನಡೆಯಿತು. ಪ್ರತಿಭಟನಾಕಾರರು ಭದ್ರತಾ ಬ್ಯಾರಿಕೇಡ್ಗಳನ್ನು ದಾಟದಂತೆ ತಡೆಯಲು ಪೊಲೀಸರು ಜನಸಮೂಹ ನಿಯಂತ್ರಣ ಕ್ರಮಗಳನ್ನು ಕೈಗೊಂಡರು. ಇದೇ ವೇಳೆ, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲಾಗಿದೆ ಎಂದು ಕೆಲವರು ಆರೋಪಿಸಿದರು. ಭಾನುವಾರದಿಂದಲೇ ಜಂತರ್ ಮಂತರ್ ಪ್ರದೇಶದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಸೋಮವಾರ ಬೆಳಗ್ಗೆಯೇ ಗಲಭೆ ನಿಯಂತ್ರಣ ವಾಹನವನ್ನು ಸ್ಥಳಕ್ಕೆ ತರಲಾಗಿತ್ತು.
ಇದಕ್ಕೂ ಮಧ್ಯೆ, ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ತಾವು ತೆರಳುತ್ತಿದ್ದೇವೆ ಎಂದು ಸಿಜೆಪಿ ವಕ್ತಾರರು ತಿಳಿಸಿದ್ದಾರೆ. ಇದಕ್ಕೂ ಮುನ್ನ, ಸೋನಂ ವಾಂಗ್ಚುಕ್ ಅವರು ಶಿಕ್ಷಣ ವ್ಯವಸ್ಥೆಯ ಇತ್ತೀಚಿನ ವೈಫಲ್ಯಗಳು, ವಿಶೇಷವಾಗಿ ಪ್ರಶ್ನೆಪತ್ರ ಸೋರಿಕೆ ಪ್ರಕರಣಗಳ ಹೊಣೆಗಾರಿಕೆಯನ್ನು ಸರ್ಕಾರ ಒಪ್ಪಿಕೊಂಡರೆ, ಅಥವಾ ಸೋಮವಾರದಿಂದ ಆರಂಭವಾಗಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಶಿಕ್ಷಣ ಕ್ಷೇತ್ರದ ಹೊಣೆಗಾರಿಕೆ ಕುರಿತ ವಿಷಯವನ್ನು ಎತ್ತಲಾಗುತ್ತದೆ ಎಂದು ಸಂಸದರು ಭರವಸೆ ನೀಡಿದರೆ, ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.