ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪ್ರತಿಯೊಬ್ಬರೂ ಖಚಿತಪಡಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದರೆ ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳು ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಹೆಸರು ಕೈಬಿಡದಂತೆ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ ಸೇರಿ ಬೇರೆ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಿದ್ದಾರೆ. ನಮ್ಮ ರಾಜ್ಯದಲ್ಲೂ ಇದು ಜಾರಿಗೆ ಬರಬಹುದು. ಮತದಾರ ಅಲ್ಲದಿದ್ರೆ ಯಾಕೆ ನಾವು ಗ್ಯಾರಂಟಿ ಯೋಜನೆ ಕೊಡಬೇಕು ಎಂದರು.
ರಾಜ್ಯಾದ್ಯಂತ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನ ಆರಂಭವಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಜುಲೈ 29ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ನಂತರ ಕರಡು ಮತಪಟ್ಟಿ ಪ್ರಕಟವಾಗಲಿದೆ.
ಮುಖ್ಯಮಂತ್ರಿ D.K ಶಿವಕುಮಾರ್ ನಿವಾಸದಲ್ಲಿಯೂ ಎಸ್ಐಆರ್ ಪ್ರಕ್ರಿಯೆ ಆರಂಭಗೊಂಡಿದ್ದು, ಅಧಿಕಾರಿಗಳು ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಿದರು. ರಾಜ್ಯದ ಎಲ್ಲ ನಾಗರಿಕರು ಈ ಪ್ರಕ್ರಿಯೆಗೆ ಸಹಕರಿಸಿ, ಮತದಾನದ ಹಕ್ಕು ಮತ್ತು ಸರ್ಕಾರಿ ಸೌಲಭ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಮನವಿ ಮಾಡಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಸರ್ಕಾರ ಮನವಿ ಮಾಡಿದ್ದು, ಯಾವುದೇ ತೊಂದರೆ ಆಗದಂತೆ ಮುಂಚಿತವಾಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಗ್ಯಾರಂಟಿ ಯೋಜನೆ ಎಂದರೇನು?
ಕರ್ನಾಟಕ ಸರ್ಕಾರವು 2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ನೀಡಿದ ಐದು ಪ್ರಮುಖ ಭರವಸೆಗಳನ್ನು ‘ಗ್ಯಾರಂಟಿ ಯೋಜನೆಗಳು‘ ಎಂಬ ಹೆಸರಿನಲ್ಲಿ ಜಾರಿಗೆ ತಂದಿದೆ. ಈ ಯೋಜನೆಗಳ ಮೂಲಕ ಮಹಿಳೆಯರು, ಬಡ ಕುಟುಂಬಗಳು ಹಾಗೂ ನಿರುದ್ಯೋಗಿ ಯುವಕರಿಗೆ ನೇರ ಆರ್ಥಿಕ ನೆರವು ಮತ್ತು ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ರಾಜ್ಯದ 5 ಪ್ರಮುಖ ಗ್ಯಾರಂಟಿ ಯೋಜನೆಗಳು
- ಗೃಹಜ್ಯೋತಿ (Gruha Jyothi)
ಪ್ರತಿ ಕುಟುಂಬಕ್ಕೆ ನಿಗದಿತ ಷರತ್ತುಗಳಡಿ 200 ಯೂನಿಟ್ವರೆಗೆ ಉಚಿತ ವಿದ್ಯುತ್. - ಗೃಹಲಕ್ಷ್ಮಿ (Gruha Lakshmi)
ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮೆ. - ಅನ್ನಭಾಗ್ಯ (Anna Bhagya)
ಅರ್ಹ ಬಿಪಿಎಲ್ ಕುಟುಂಬಗಳಿಗೆ ಆಹಾರ ಧಾನ್ಯ ಮತ್ತು ಸಂಬಂಧಿತ ನೆರವು. - ಶಕ್ತಿ ಯೋಜನೆ (Shakti)
ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. - ಯುವನಿಧಿ (Yuva Nidhi)
ಅರ್ಹ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪೂರೈಸಿದ ಯುವಕರಿಗೆ ನಿರುದ್ಯೋಗ ಭತ್ಯೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮತಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.