ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಳೆಗೆ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಬಲಿಯಾಗಿದ್ದಾರೆ.
ಶಿವಾಜಿನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಏಳು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಕಾಂಪೌಂಡ್ ಗೆ ಹೊಂದಿಕೊಂಡಂತೆ ವ್ಯಾಪಾರ ಮಾಡುತ್ತಿದ್ದವರು ಸೇರಿ ಹಲವರು ಮೃತಪಟ್ಟಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಬೊಮ್ಮನಹಳ್ಳಿ, ಕಾಟನ್ ಪೇಟೆ, ಹೆಚ್ಎಎಲ್ ವಿಮಾನ ನಿಲ್ದಾಣ, ಬಿಟಿಎಂ ಲೇಔಟ್ ಸೇರಿ ಹಲವೆಡೆ ಮಳೆಯಾಗಿದೆ.
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನ ಮೃತಪಟ್ಟ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ತೆರಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ತೆರಳಿದ್ದಾರೆ. ಮಳೆಯಿಂದಾದ ಸಮಸ್ಯೆಗಳ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಸವನಗುಡಿಯಲ್ಲಿ ಭಾರಿ ಗಾತ್ರದ ಮರ ಬಿದ್ದ ಪರಿಣಾಮ ಬಸ್, ಲಾರಿ, ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಹಾನಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಯ ಮೇಲೆ ಮರ ಬಿದ್ದು ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಬಸ್ ಮತ್ತು ಬೈಕ್ ಗಳು ಜಖಂಗೊಂಡಿವೆ.