ಚಿಕ್ಕಮಗಳೂರು : ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಡೆದ ಆಡಳಿತಾತ್ಮಕ ಆದೇಶದಂತೆ, ಡಾ. ಮಂಜುನಾಥ್ ಹೆಚ್.ಕೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಹಿಂದೆ ಅವರು ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣಾಧಿಕಾರಿ (ಆರ್.ಸಿ.ಹೆಚ್.) ಆಗಿ ಸೇವೆ ಸಲ್ಲಿಸುತ್ತಿದ್ದು, ತಾಯಿ-ಮಗು ಆರೋಗ್ಯ, ಕುಟುಂಬ ಕಲ್ಯಾಣ ಯೋಜನೆಗಳು, ಲಸಿಕಾ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಆರೋಗ್ಯ ಸೇವೆಗಳ ಅನುಷ್ಠಾನದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.
ಅವರ ಆಡಳಿತಾತ್ಮಕ ಅನುಭವ ಮತ್ತು ಆರೋಗ್ಯ ಕ್ಷೇತ್ರದ ಪರಿಣತಿಯನ್ನು ಪರಿಗಣಿಸಿ ಸರ್ಕಾರ ಈ ಮಹತ್ವದ ಜವಾಬ್ದಾರಿಯನ್ನು ವಹಿಸಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹುಲಿಕೆರೆ ಗ್ರಾಮದ ನಿವಾಸಿಯಾಗಿರುವ ಡಾ. ಮಂಜುನಾಥ್ ಅವರು ಕೃಷ್ಣಮೂರ್ತಿ ಮತ್ತು ಮಹಾಲಕ್ಷ್ಮಿ ದಂಪತಿಯ ಪುತ್ರರು. ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ಸೇವಾ ಮನೋಭಾವ, ಪ್ರಾಮಾಣಿಕತೆ ಹಾಗೂ ಜನಪರ ಕಾರ್ಯವೈಖರಿಯಿಂದ ಅವರು ಉತ್ತಮ ಹೆಸರು ಗಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದು, ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ತಾಯಿ-ಮಗು ಆರೋಗ್ಯ ಸೇವೆಗಳಿಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಡಾ. ಮಂಜುನಾಥ್ ಅವರ ನೇಮಕಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು, ಸ್ನೇಹಿತರು, ಸಹೋದರರು ಹಾಗೂ ಬಂಧುಬಳಗ ಹರ್ಷ ವ್ಯಕ್ತಪಡಿಸಿದ್ದು, ಅವರ ಹೊಸ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.