ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಅಧಿಕೃತ ಹೆಸರು ಮತ್ತು ಚುನಾವಣಾ ಚಿಹ್ನೆ ಬಳಕೆಗೆ ಚುನಾವಣಾ ಆಯೋಗ ತಡೆ ನೀಡಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಟಿಎಂಸಿ ಪಕ್ಷದ ಹೆಸರು ಮತ್ತು ಪಕ್ಷದ ಸಾಂಪ್ರದಾಯಿಕ ‘ಹೂವು ಮತ್ತು ಹುಲ್ಲು’ ಚಿಹ್ನೆಯನ್ನು ಬಳಸುವುದನ್ನು ಎರಡೂ ಬಣಗಳಿಗೆ ನಿರ್ಬಂಧಿಸಿ ಚುನಾವಣಾ ಆಯೋಗ ಸೆಪ್ಟೆಂಬರ್ 17ರಂದು ಮಧ್ಯಂತರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಮಮತಾ ಬ್ಯಾನರ್ಜಿ ಅವರು ತಮ್ಮ ವಕೀಲ ಅಭಿನವ್ ಸಿಂಗ್ ಅವರ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷದ ಹೆಸರು, ಚಿಹ್ನೆ ಹಾಗೂ ಸಂಘಟನಾ ನಿಯಂತ್ರಣದ ಮೇಲೆ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಿತಬ್ರತ ಬ್ಯಾನರ್ಜಿ ನೇತೃತ್ವದ ಬಣ ಹಕ್ಕು ಮಂಡಿಸಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ನೇತೃತ್ವದ ಬಣಕ್ಕೆ ‘ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್’ ಎಂಬ ಹೆಸರು ಹಾಗೂ ‘ಫುಟ್ಬಾಲ್ ಆಟಗಾರ’ ಚಿಹ್ನೆ ನೀಡಲಾಗಿದೆ. ಮತ್ತೊಂದು ಬಣಕ್ಕೆ ‘ಡೆಮಾಕ್ರಟಿಕ್ ತೃಣಮೂಲ ಕಾಂಗ್ರೆಸ್’ ಎಂಬ ಹೆಸರು ಮತ್ತು ‘ಲಕೋಟೆ’ ಚಿಹ್ನೆ ಹಂಚಿಕೆ ಮಾಡಲಾಗಿದೆ.
ಅಕ್ಟೋಬರ್ 6ರಂದು ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆ ಆಯೋಗದ ಈ ಮಧ್ಯಂತರ ವ್ಯವಸ್ಥೆ ಮಹತ್ವ ಪಡೆದಿದೆ. ಈ ಉಪಚುನಾವಣೆಗಳಿಗಾಗಿ ಎರಡೂ ಬಣಗಳು ಹೊಸ ಹೆಸರು ಹಾಗೂ ಚಿಹ್ನೆಗಳನ್ನು ಬಳಸಬೇಕಾಗಿದೆ.
ಇದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ಮೂಲ ಚಿಹ್ನೆ ಪಡೆಯಲು ಸಾಧ್ಯವಾಗಲಿಲ್ಲ ಎಂಬ ಕಾರಣ ನೀಡಿ ತಮ್ಮ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಮತ್ತೆ ಯೂಟರ್ನ್ ಹೊಡೆದಿದ್ದಾರೆ. ರೆಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಬಣದ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ, ನಾಮಪತ್ರ ಹಿಂಪಡೆಯುವ ನಿರ್ಧಾರವನ್ನ ಕೈಬಿಟ್ಟಿದ್ದಾರೆ. ಹೊಸ ಚಿಹ್ನೆಯೊಂದಿಗೆ ಜನರ ಬಳಿಗೆ ತೆರಳುವುದಾಗಿ ಹೇಳುವ ಮೂಲಕ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬಂಗಾಳ ರಾಜಕೀಯ ಬೆಳವಣಿಗೆಗೆ ಹೊಸ ತಿರುವುನೀಡಿದಂತಾಗಿದೆ.
ಸೆ.13 ರಂದು ನಂದಿಗ್ರಾಮದ ಅಭ್ಯರ್ಥಿಯನ್ನಾಗಿ ಸಂಚಿತಾ ಪ್ರಧಾನ್ ಹಾಗೂ ರೆಜಿನಗರ್ ಅಭ್ಯರ್ಥಿಯನ್ನಾಗಿ ಚೌಧರಿ ಹೆಸರನ್ನ ಘೋಷಣೆ ಮಾಡಲಾಗಿತ್ತು. ಆದರೆ ನಂದಿಗ್ರಾಮದಿಂದ ಸಂಚಿತಾ ಪ್ರಧಾನ್ ತಮ್ಮ ನಾಮಪತ್ರ ಹಿಂಪಡೆದರು. ನಿನ್ನೆ ಮಧ್ಯಾಹ್ನ ಸಿಎಂ ಸುವೇಂದು ಅಧಿಕಾರಿ ಅವರನ್ನ ಭೇಟಿಯಾದ ಬಳಿಕ ಈ ಬೆಳವಣಿಗೆ ನಡೆದಿತ್ತು.