ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶ ನೀಡಿದೆ.
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವೇಗ ನಿಯಂತ್ರಕ, ವಾಹನಗಳ ಟ್ರ್ಯಾಕಿಂಗ್ ಸಾಧನ ಮತ್ತು ತುರ್ತು ಪರಿಸ್ಥಿತಿಯಲ್ಲಿ ಬಳಸುವ ಪ್ಯಾನಿಕ್ ಬಟನ್ ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ಮೋಟಾರ್ ವಾಹನ ನಿಯಮಗಳನ್ನು ತಕ್ಷಣವೇ ಜಾರಿಗೊಳಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ರಸ್ತೆ ಸುರಕ್ಷತೆಗೆ ಸಂಬಂಧಿಸಿದ, ಅರ್ಜಿಯ ವಿಚಾರಣೆ ನಡೆಸುವಾಗ ಈ ನಿರ್ದೇಶನ ನೀಡಿದೆ.
ಸಂಸತ್ತಿನಲ್ಲಿ ಮಂಡಿಸಲಾದ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಶೇಕಡ 5ಕ್ಕಿಂತ ಕಡಿಮೆ ಸಾರಿಗೆ ವಾಹನಗಳಲ್ಲಿ ಮಾತ್ರ ವೇಗ ನಿಯಂತ್ರಕಗಳಿವೆ. ಶೇಕಡ 1ರಷ್ಟು ವಾಹನಗಳಲ್ಲಿ ಟ್ರ್ಯಾಕಿಂಗ್ ಸಾಧನಗಳಿವೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಿಯಮಗಳನ್ನು ಉಲ್ಲಂಘಿಸುವ ಸಾರ್ವಜನಿಕ ವಾಹನಗಳಿಗೆ ಫಿಟ್ನೆಸ್ ಪ್ರಮಾಣ ಪತ್ರ(ಎಫ್.ಸಿ.) ಅಥವಾ ಪರ್ಮಿಟ್ ಗಳನ್ನು ನೀಡಬಾರದು ಎಂದು ಆದೇಶ ನೀಡಿದೆ.