ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಿಂದ 50 ಸಾವಿರ ಸೈಟ್ ಹಂಚಿಕೆಗೆ ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸರ್ಕಾರಿ ಜಮೀನುಗಳನ್ನು ಗುರುತಿಸಲಾಗಿದೆ. ಬಡವರಿಗೆ ಸೈಟ್ ಹಂಚುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯ ಹಿಂದಿನ ಪರಿಸ್ಥಿತಿ, ಪ್ರಸ್ತುತ ಪರಿಸ್ಥಿತಿ ಸೇರಿದಂತೆ ಹಲವು ವಿವರಗಳನ್ನು ಪಡೆಯಬೇಕು. ಅಭಿವೃದ್ಧಿ ಕೆಲಸಗಳಲ್ಲಿ ಬೋಗಸ್ ಬಿಲ್, ಕಾಮಗಾರಿಗಳಿಗೆ ಅವಕಾಶ ನೀಡಬಾರದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಿಎಂ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿ – ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ:
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಚರ್ಚಿಸಿ, ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಹೇಳಿದ್ದಾರೆ.
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಆರು ರಾಜ್ಯಗಳ 56,000 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸಲು ಕೇಂದ್ರ ಪ್ರಸ್ತಾಪಿಸಿದೆ. ಕರ್ನಾಟಕದ 20,668 ಚ.ಕಿ.ಮೀ. ಪ್ರದೇಶ, 10 ಜಿಲ್ಲೆಗಳ (ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ) 33 ತಾಲ್ಲೂಕುಗಳು ಹಾಗೂ 1,449 ಗ್ರಾಮಗಳು ESA ವ್ಯಾಪ್ತಿಗೆ ಸೇರುತ್ತವೆ. ಇದರಿಂದ ಕೃಷಿಕರ ಜೀವನೋಪಾಯ ಹಾಗೂ ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂದರು
ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, ಕೇಂದ್ರ ಸರ್ಕಾರವು 31 ಜುಲೈ 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದಾಗ್ಯೂ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ ಎಂದರು
ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಜನರ ಅಭಿಪ್ರಾಯವನ್ನೂ ಪಡೆಯಲಾಗುವುದು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಜನಜಾಗೃತಿ ಮೂಡಿಸಲಾಗುವುದು. ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಈ ವಿಚಾರವಾಗಿ ಕಾನೂನು ಚೌಕಟ್ಟಿನಲ್ಲಿ ಚರ್ಚಿಸಲಾಗುವುದು. ಕರ್ನಾಟಕಕ್ಕೆ ಒಂದು ನಿಯಮ ಹಾಗೂ ಬೇರೆಡೆಗೆ ಇನ್ನೊಂದು ನಿಯಮವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.
ಬರಗಾಲ ಪರಿಸ್ಥಿತಿ ನಿರ್ವಹಣೆ:
ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ಶಾಸಕರ ಪಾತ್ರದ ಬಗ್ಗೆ ಅವರಿಗೆ ಸಭೆಯಲ್ಲಿ ವಿವರಿಸಲಾಗಿದೆ. 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಶೀಘ್ರವೇ ಉಪಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ಸರ್ಕಾರ ನಿರ್ಣಯ ಮಾಡಲಿದ್ದು, ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ನಿಯೋಗದೊಂದಿಗೆ ತೆರಳಿ ಮನವಿ ಮಾಡಲಿದ್ದೇನೆ ಎಂದರು.
ಎಸ್ಐಆರ್ – ಅರ್ಹ ಮತದಾರರ ಹಕ್ಕು ಉಳಿಸಲು ಸರ್ಕಾರ ಬದ್ಧ:
ಎಸ್ಐಆರ್ ಪ್ರಕ್ರಿಯೆಯಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಖಾಯಂ ನಿವಾಸ ಪತ್ರ, ಜಾತಿ ಪ್ರಮಾಣ ಪತ್ರವನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ. ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರನ್ನು ಕೋರಲಾಗಿದೆ. ಜನರಿಗೆ ಮತದ ಶಕ್ತಿ ಹಾಗೂ ಮತದ ಹಕ್ಕಿನ ಬಗ್ಗೆ ಶಾಸಕರು ಅರಿವು ಮೂಡಿಸಬೇಕು. ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಜನರಿಗೆ ಮತದಾನದ ಹಕ್ಕು ಕೊಡಿಸಲು ಶ್ರಮಿಸಬೇಕೆಂದು ಶಾಸಕರಿಗೆ ಮಾರ್ಗದರ್ಶನ ನೀಡಲಾಗಿದೆ.
ಭಾರತ್ ಜೋಡೋ ಯುವಸಂಘ – ಆನ್ಲೈನ್ನಲ್ಲಿ 7 ಲಕ್ಷ ನೋಂದಣಿ:
ಯುವಕರಿಗೆ ಹೊಸ ಪೀಳಿಗೆಯ ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ಪಂಚಾಯತಿ ಮಟ್ಟದಲ್ಲಿ ಕ್ರೀಡೆ, ಯೋಗ, ಸಮುದಾಯ ಸೇವೆ, ನಾಯಕತ್ವ, ವಿಪತ್ತು ನಿರ್ವಹಣೆ ವಿಷಯಗಳ ಬಗ್ಗೆ ಸೂಕ್ತ ಅರಿವು, ಡ್ರಗ್ಸ್ ಮುಕ್ತರಾಗಲು, ದೇಶದ ಸಮಗ್ರತೆ, ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಜಾತಿ, ಧರ್ಮಗಳನ್ನು ಬದಿಗೊತ್ತಿ ಭಾಗವಹಿಸಲು ಮಾರ್ಗದರ್ಶನ ನೀಡಬೇಕು. ಪ್ರತಿ ಸಂಘಕ್ಕೆ 10 ಲಕ್ಷ ರೂ.ಗಳನ್ನು ನೀಡಲಾಗುವುದು. ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಪಂಚಾಯತಿಗಳಲ್ಲಿ 200 ಜನ ಸದಸ್ಯರಾಗಬೇಕು. ಆನ್ಲೈನ್ನಲ್ಲಿ ಈಗಾಗಲೇ 7 ಲಕ್ಷ ಜನ ಸದಸ್ಯತ್ವ ಪಡೆದಿದ್ದಾರೆ. ಸರ್ಕಾರಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ನಿಯಮಿತವಾಗಿ ಸಭೆ ನಡೆಸಲು ಅವಕಾಶ ನೀಡಲಾಗಿದೆ ಎಂದರು.