ಬೆಂಗಳೂರು : ಆರೋಗ್ಯ ಇಲಾಖೆಯ ಘನತೆಗೆ ಧಕ್ಕೆ ತರುವ ಅಥವಾ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಿದೆ.ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಲಾಖೆಯ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕ್ಷಣಾರ್ಧದಲ್ಲಿ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಎನ್ನುವುದು ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ ಸಂಜೀವಿನಿ. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕನಿಷ್ಠ ಶಿಸ್ತು ಮತ್ತು ಸೇವಾ ಮನೋಭಾವ ಇರಲೇಬೇಕು ಎಂಬುದು ನಮ್ಮ ಸರ್ಕಾರದ ಅಚಲ ನಿಲುವು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಇಲಾಖೆಯ ಕೆಲವು ವೈದ್ಯರು ಮತ್ತು ಸಿಬ್ಬಂದಿಯ ಅಶಿಸ್ತಿನ ವರ್ತನೆಗಳ ಬಗ್ಗೆ ವರದಿಗಳು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಜನ ಸಾಮಾನ್ಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡುವುದು ಅಥವಾ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಹಾಜರಾಗದೆ ಇರುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದನ್ನು ಮತ್ತು ಕರ್ತವ್ಯ ಲೋಪ ಎಸಗಿರುವುದನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದಿದ್ದಾರೆ.
ಈ ಮೂಲಕ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ನಾನು ನೀಡುವ ಸ್ಪಷ್ಟ ಸೂಚನೆ ಏನೆಂದರೆ:
ನಿಮ್ಮ ಹುದ್ದೆ ಅಥವಾ ಪ್ರಭಾವ ಎಷ್ಟೇ ಇರಲಿ, ಸಾರ್ವಜನಿಕರ ಮುಂದೆ ಸರಿಯಾಗಿ ವರ್ತಿಸದಿದ್ದರೆ ಅಥವಾ ಅಶಿಸ್ತು ತೋರಿದರೆ ಕ್ಷಣಾರ್ಧದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಾನು ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಪ್ರತಿಯೊಬ್ಬರೂ ಜನರಿಗೆ ಉತ್ತರದಾಯಿಯಾಗಿರಬೇಕು. ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಅಥವಾ ಇಲಾಖೆಯ ಘನತೆಗೆ ಧಕ್ಕೆ ತರುವ ಯಾರೇ ಆಗಿದ್ದರೂ ಮುಂದಿನ ದಿನಗಳಲ್ಲಿ ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ.ಆರೋಗ್ಯ ಇಲಾಖೆ ಉದ್ಯೋಗ ಇರುವುದು ಜನ ಸೇವೆಗಾಗಿ, ಇಲ್ಲಿ ಶಿಸ್ತು ಉಲ್ಲಂಘಿಸುವವರಿಗೆ ಸ್ಥಾನವಿಲ್ಲ ಎಂದಿದ್ದಾರೆ.