ಶಿವಮೊಗ್ಗ: ಕಾಡಿನಿಂದ ವೇಗವಾಗಿ ಬರುತ್ತಿದ್ದ ಚಿರತೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 169 ರ 15ನೇ ಮೈಲಿಕಲ್ಲು ಬಳಿ ಶುಕ್ರವಾರ ಮಧ್ಯಾಹ್ನ ಬೈಕ್ ಡಿಕ್ಕಿ ಹೊಡೆದು ಹೆಣ್ಣು ಚಿರತೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂದಾಜು ನಾಲ್ಕು ವರ್ಷದ ಚಿರತೆ ಕಾಡಿನಿಂದ ವೇಗವಾಗಿ ರಸ್ತೆ ದಾಟುವ ಪ್ರಯತ್ನದಲ್ಲಿದ್ದಾಗ ಇದೇ ಮಾರ್ಗವಾಗಿ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.
ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗಾಜನೂರು ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡು ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿರತೆಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗಾಜನೂರು ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪ್ರದೇಶದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಶವ ವಶಕ್ಕೆ ಪಡೆದಿದ್ದಾರೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.