ಬೆಂಗಳೂರು: ಮಹಾನಗರ ಪಾಲಿಕೆಗಳ ನೌಕರರ ವಿವಿಧ ಬೇಡಿಕೆಗಳನ್ನು ಮೇ 24 ರೊಳಗೆ ಈಡೇರಿಸದಿದ್ದರೆ ಎಲ್ಲಾ ಕೆಲಸ ಕಾರ್ಯಗಳ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕೆಲಸ ಕಾರ್ಯ ಸ್ಥಗಿತಗೊಳಿಸಿ ಜೂನ್ ನಲ್ಲಿ ಮುಷ್ಕರ ಕೈಗೊಳ್ಳುವುದಾಗಿ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ 2025ರ ಜೂಲೈನಲ್ಲಿ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ ಸಚಿವರು, ಕಾರ್ಯದರ್ಶಿಗಳು ಸಭೆ ನಡೆಸಿದ್ದರು. ಈ ವೇಳೆ ಪಾಲಿಕೆ ನೌಕರರ ಎಲ್ಲಾ ಬೇಡಿಕೆಗಳನ್ನು ಆರು ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಕೈಗೊಂಡಿದ್ದ ಮುಷ್ಕರ ಕೈ ಬಿಡಲಾಗಿತ್ತು. ಒಂದು ವರ್ಷ ಕಳೆದರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಸಂಘದ ಪದಾಧಿಕಾರಿಗಳೊಂದಿಗೆ ಮೇ 24ರಂದು ಸಭೆ ನಡೆಸಿ ಮುಷ್ಕರದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸಂಘದ ಅಧ್ಯಕ್ಷ ಎ. ಅಮೃತರಾಜ್ ಪತ್ರ ಬರೆದು ಒತ್ತಾಯಿಸಿದ್ದಾರೆ.