ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು ಎಂದು ಸ್ಮರಿಸಿದ್ದಾರೆ.
ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ. ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.