ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.
ಡಿ. ಸುಧಾಕರ್ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಜನಪರ ಕಾಳಜಿ ಹೊಂದಿದ್ದ ಅವರು ಶಾಸಕರಾಗಿ, ಸಚಿವರಾಗಿ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಹಲವು ವರ್ಷಗಳ ಕಾಲ ಜೊತೆಯಾಗಿ ಕೆಲಸ ಮಾಡಿದ್ದ ಆತ್ಮೀಯ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಮನಸ್ಸನ್ನು ಭಾರವಾಗಿಸಿದೆ, ಅವರ ನಿಧನ ನಂಬಲಾಗದ ಸಂಗತಿಯಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಸದಾ ಸ್ಮರಣೀಯರಾಗಿರುತ್ತಾರೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.