ಬೆಂಗಳೂರು: ಮುಸ್ಲಿಮರ ಕುರಿತಾಗಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಶೇಟ್ ವಿರುದ್ಧ ದಾಖಲಾದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಧಾರವಾಡದ ಟೌನ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಂಜೀವ್ ಕುಮಾರ್ ಹಂಚಾಟೆ ರಜಾಕಾಲೀನ ಏಕ ಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು.
ಕೆಲಕಾಲ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸುವ ಅಗತ್ಯವಿದೆ. ಮೇಲ್ನೋಟಕ್ಕೆ ತಡೆ ನೀಡುವ ಪ್ರಕರಣ ಇದಾಗಿದೆ. ಆದ್ದರಿಂದ ಪ್ರಕರಣಕ್ಕೆ ತಡೆಜಾಜ್ಞೆ ನೀಡಲಾಗಿದೆ ಎಂದು ಆದೇಶಿಸಿದೆ..
ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪೋಲೀಸ್ ದೂರು ನೀಡಿದ್ದಾರೆ. ಅವರು ಬಾಧಿತರಲ್ಲ, ಇದರಿಂದ ದೂರು ನೀಡುವ ಯಾವುದೇ ಹಕ್ಕು ಅವರಿಗೆ ಇಲ್ಲ. ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ಸಂವಿಧಾನದ 19ನೇ ವಿಧಿಯ ವ್ಯಾಪ್ತಿಗೆ ಬರುತ್ತದೆ. ಹಾಲಿ ಪ್ರಕರಣಕ್ಕೆ ಬಿಎನ್ಎಸ್ ಸೆಕ್ಷನ್ 196 ಪ್ರಚೋದನಾಕಾಕಾರಿ ಭಾಷಣ ಮಾಡಿ ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.