ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಜನಿವಾರ, ಹಿಜಾಬ್, ಶಿವ ದಾರ ಸೇರಿ ಸಾಂಪ್ರದಾಯಿಕ ಸಂಕೇತಗಳಿಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಖಾಸಗಿ ಶಾಲಾ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ಸಮವಸ್ತ್ರದ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಆದೇಶ ಮಾಡಲು ಬರುವುದಿಲ್ಲ ಎಂದು ಹೇಳಲಾಗಿದೆ.
ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಸರ್ಕಾರದ ವಸ್ತ್ರ ಸಂಹಿತೆ ಆದೇಶ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಬಹುದು. ಈ ಆದೇಶವನ್ನು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಸಂವಿಧಾನಾತ್ಮಕವಾಗಿ ಕಡ್ಡಾಯಗೊಳಿಸಲು ಬರುವುದಿಲ್ಲ. ಟಿಎಂಎ ಪೈ ಪ್ರಕರಣದಲ್ಲಿ ನ್ಯಾಯಾಲಯ ಈ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಸಮವಸ್ತ್ರದ ವಿಚಾರ ಆಯಾ ಆಡಳಿತ ಮಂಡಳಿಗಳ ಸ್ವಂತ ನಿರ್ಧಾರಕ್ಕೆ ಬಿಟ್ಟಿದ್ದು. ಸರ್ಕಾರ ನಿರ್ದಿಷ್ಟ ವಸ್ತ್ರ ಸಂಹಿತೆ ಕಡ್ಡಾಯಗೊಳಿಸುವಂತಿಲ್ಲ ಎಂದು ಹೇಳಿದೆ. ಆದರೆ ಸ್ವತಃ ಆಡಳಿತ ಮಂಡಳಿ ಒಪ್ಪಿದರೆ ಅಭ್ಯಂತರವಿಲ್ಲ ಎಂದು ಹೇಳಲಾಗಿದೆ.
ಖಾಸಗಿ ಶಾಲೆಗಳ ರುಪ್ಸಾ ಸಂಘಟನೆ ಕೂಡ ವಸ್ತ್ರ ಸಂಹಿತೆ ಕುರಿತದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರದ ಆದೇಶದಿಂದ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮ ಜಾತಿಗಳ ವಿದ್ಯಾರ್ಥಿಗಳು ತಮ್ಮದೇ ಆದ ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಿ ಬರಲು ಮುಂದಾದರೆ ಸಮಾನತೆ ಎಲ್ಲಿ ಬರುತ್ತದೆ ಎಂದು ಪ್ರಶ್ನಿಸಿದೆ.