ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯವಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 8960 ಕ್ವಿಂಟಲ್ ಸೋಯಾಬಿನ್ 1344 ಕ್ವಿಂಟಲ್ ಶೇಂಗಾ ಬೀಜಕ್ಕೆ ಅಂದಾಜು ಬೇಡಿಕೆ ಇದ್ದು ರಾಜ್ಯಮಟ್ಟದಲ್ಲಿಯೂ ಸೋಯಾಬಿನ್ ಬೀಜಕ್ಕೆ 1.80 ಲಕ್ಷ ಕ್ವಿಂಟಲ್ ಬೇಡಿಕೆ ಇದೆ. 2.09 ಲಕ್ಷ ಕ್ವಿಂಟಲ್ ದಾಸ್ತಾನು ಇದೆ. 70,000 ಕ್ವಿಂಟಲ್ ಶೇಂಗಾ ಬೀಜಕ್ಕೆ ಬೇಡಿಕೆ ಇದ್ದು, 74,000 ಕ್ವಿಂಟಲ್ ದಾಸ್ತಾನು ಇದೆ. ಒಟ್ಟಾರೆ ರಾಜ್ಯದಲ್ಲಿ ಎಲ್ಲಾ ಬೆಳೆಗಳ 4.71 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು 5.46 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲವೆಂದು ಕೃಷಿ ಸಚಿವರು ತಿಳಿಸಿದ್ದಾರೆ.