ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ತೀವ್ರಗೊಂಡಿರುವ ಹಿನ್ನೆಲೆ, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪಣಂಬೂರು, ತಣ್ಣೀರ್ಭಾವಿ ಹಾಗೂ ಸೋಮೇಶ್ವರ ಕಡಲತೀರಗಳಲ್ಲಿ ಸಮುದ್ರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಜೊತೆಗೆ ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ.
ಜಿಲ್ಲಾಡಳಿತದ ಸೂಚನೆಯಂತೆ, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಪಣಂಬೂರು ಕಡಲತೀರದಲ್ಲಿ ಕೆಂಪು ಹಗ್ಗಗಳನ್ನು ಕಟ್ಟಲಾಗಿದ್ದು, ಅಪಾಯ ಸೂಚಿಸುವ ಫಲಕಗಳನ್ನು ಅಳವಡಿಸಲಾಗಿದೆ. ಕರಾವಳಿ ಭದ್ರತಾ ಪೊಲೀಸ್ ಹಾಗೂ ಲೈಫ್ಗಾರ್ಡ್ ಸಿಬ್ಬಂದಿ 24 ಗಂಟೆಗಳ ನಿಗಾ ವಹಿಸಿದ್ದಾರೆ. ನಿಯಮ ಉಲ್ಲಂಘಿಸಿ ಸಮುದ್ರಕ್ಕೆ ಇಳಿಯುವವರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಆದರೆ ಕಡಲತೀರದ ತೀರ ಪ್ರದೇಶದಲ್ಲಿರುವ ಕುದುರೆ ಸವಾರಿ, ಒಂಟೆ ಸವಾರಿ, ಮಕ್ಕಳ ಆಟದ ವಲಯ ಹಾಗೂ ಆಹಾರ ಮಳಿಗೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಸುರಕ್ಷಿತ ಅಂತರದಿಂದ ಮಳೆಗಾಲದ ಸಮುದ್ರದ ಸೌಂದರ್ಯವನ್ನು ವೀಕ್ಷಿಸಬಹುದು.
ಇನ್ನೊಂದೆಡೆ, ಮುಲ್ಕಿ ಸಮೀಪದ ಸಸಿಹಿತ್ಲು ಮುಂಡಾ ಬೀಚ್ನಲ್ಲೂ ಭಾರೀ ಮಳೆ ಹಾಗೂ ಬಿರುಗಾಳಿಯ ಕಾರಣ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮರಗಳು ಉರುಳುವ ಅಪಾಯ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಮೂರುರಿಂದ ನಾಲ್ಕು ತಿಂಗಳುಗಳ ಕಾಲ ಕರಾವಳಿ ಪ್ರದೇಶಗಳಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.