ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆ ಮಕ್ಕಳನ್ನು ಬಳಸಿದ ಆರೋಪದ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ಶಿವಮೊಗ್ಗದ ಕುಂಸಿ ಪೋಲಿಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಅದನ್ನು ಆಧರಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕೆಂದು ಕೋರಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿದಾರರು ಪ್ರಚಾರದ ವೇಳೆ ಮಕ್ಕಳನ್ನು ಬಳಸಿಕೊಂಡಿಲ್ಲ. ಪ್ರಚಾರ ಸಭೆ ಹತ್ತಿರದಲ್ಲೇ ಶಾಲೆ ಇತ್ತು. ಅದೇ ಸಮಯದಲ್ಲಿ ಶಾಲೆ ಬಿಟ್ಟಿದ್ದರಿಂದ ಮನೆಗೆ ಹೋಗುವ ಮಕ್ಕಳು ಚುನಾವಣಾ ಪ್ರಚಾರ ಸಭೆಯ ಬಳಿ ಅವರಾಗಿಯೇ ಬಂದು ನಿಂತಿದ್ದರು ಎಂಬ ಅಂಶವನ್ನು ಪರಿಗಣಿಸಿ ಶಾರದಾ ಪೂರ್ಯಾನಾಯ್ಕ್ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
2023ರ ವಿಧಾನಸಭೆ ಚುನಾವಣೆಯ ವೇಳೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾಳಿ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಬ್ಬನಹಳ್ಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್ ಅವರ ಚುನಾವಣಾ ಪ್ರಚಾರ ಸಭೆ ನಡೆದಿತ್ತು. ಅದರಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಚುನಾವಣಾ ಕರ್ತವ್ಯದಲ್ಲಿದ್ದ ಎಂ.ಇ. ಜಯಪ್ರಕಾಶ್ ದೂರು ನೀಡಿದ್ದರು. ಇದನ್ನು ಆಧರಿಸಿ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೆಲಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಪೊಲೀಸರು ಮೊದಲು ಪ್ರಕರಣವನ್ನು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ದಾಖಲಿಸಿಕೊಂಡು ನಂತರ ಬಾಲ ನ್ಯಾಯ ಕಾಯ್ದೆಯಡಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ಚುನಾವಣಾ ಪ್ರಚಾರದ ವೇಳೆ ಮಕ್ಕಳನ್ನು ಬಳಸಿಕೊಂಡಿಲ್ಲ. ಪ್ರಚಾರ ಸಭೆ ನಡೆಯುವ ಸ್ಥಳದ ಸಮೀಪದಲ್ಲಿ ಶಾಲೆ ಇದೆ. ಅದೇ ಸಮಯದಲ್ಲಿ ಶಾಲೆ ಬಿಟ್ಟಿದ್ದರಿಂದ ಮನೆಗೆ ಹೋಗುವ ಮಕ್ಕಳು ಚುನಾವಣಾ ಪ್ರಚಾರ ಸಭೆಯ ಬಳಿ ಅವರಾಗಿಯೇ ಬಂದು ನಿಂತಿದ್ದರು ಎನ್ನುವ ಅಂಶ ಪರಿಗಣಿಸಿ ಶಾರದಾ ಪೂರ್ಯಾನಾಯ್ಕ್ ಅವರ ವಿರುದ್ಧದ ಪ್ರಕರಣ ರದ್ದುಪಡಿಸಲಾಗಿದೆ.