ಬೆಂಗಳೂರು: ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ.
ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ಜನನ ಮತ್ತು ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವರು ಆಡಿರುವ ಮಾತುಗಳು ಕೋಟ್ಯಂತರ ಹಿಂದೂಗಳ ಶ್ರದ್ಧೆ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯಿಂದ ದೂರು ದಾಖಲಿಸಲಾಗಿದ್ದು, ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಈ ಹಿಂದೆಯೂ ಕೂಡ ಪ್ರೊ. ಭಗವಾನ್ ಅವರು ಶ್ರೀರಾಮ, ಶ್ರೀಕೃಷ್ಣ ಮತ್ತು ಭಗವದ್ಗೀತೆಯ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರು.
ಸದ್ಯ ಅವರ ಭಾಷಣದ ವಿಡಿಯೋ ಮತ್ತು ಧ್ವನಿಮುದ್ರಣ ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ದೂರಿನೊಂದಿಗೆ ಪೊಲೀಸರಿಗೆ ಸಲ್ಲಿಸಲಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನದ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಪ್ರೊ.ಕೆ.ಎಸ್.ಭಗವಾನ್, ಶ್ರೀರಾಮ ದಶರಥ ಮಹಾರಾಜನಿಗೆ ಜನಿಸಿದವನಲ್ಲ. ಪುತ್ರಕಾಮೇಷ್ಠಿ ಯಾಗ ಮಾಡಿದಾಗ ಜನಿಸಿದವನು. ಹಾಗಾಗಿ ರಾಮ ಧಶರಥನ ಮಗನಲ್ಲ ಎಂದು ರಾಮನ ಹುಟ್ಟಿನ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು.