ಹಾಸನ: ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು, ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಮಾತನಾಡಿದ ಅವರು, ಯಾವುದೇ ಅಸಮಾಧಾನ ಎಲ್ಲಿಯೂ ಕೂಡ ಇಲ್ಲ. ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳು ಕೇಳುವುದು ಸ್ವಾಭಾವಿಕ. ಅಭಿಮಾನಿಗಳು ಕೇಳಬೇಕು, ಅದು ಪ್ರಜಾಪ್ರಭುತ್ವದ ಸೌಂದರ್ಯ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಪಕ್ಷದ ಹಿರಿಯ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ಬಗ್ಗೆ ನಾಯಕರು ತೀರ್ಮಾನಿಸುತ್ತಾರೆ. ಯಾವುದೇ ಗೊಂದಲವಿಲ್ಲ. ಸರ್ಕಾರ ಚೆನ್ನಾಗಿ ಕೆಲಸ ನಿರ್ವಹಿಸುತ್ತಿದೆ. ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿ ಜನರ ವಿಶ್ವಾಸ ಗಳಿಸುತ್ತದೆ. ಕಾಂಗ್ರೆಸ್ ಪಕ್ಷ ಅದಕ್ಕೆ ಸಂಪೂರ್ಣ ಬೆಂಬಲ ಕೊಡುತ್ತದೆ ಎಂದು ಹೇಳಿದ್ದಾರೆ.
ವಿಧಾನಸಭೆ ಸ್ಪೀಕರ್ ಆಯ್ಕೆ ವಿಚಾರದ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ಮಾಡುತ್ತಾರೆ. ಉತ್ತಮವಾದ ಸಭಾಧ್ಯಕ್ಷರು ಮತ್ತು ಮಂತ್ರಿಗಳ ಸರ್ಕಾರ ಇರುತ್ತದೆ. ನಾವು ಶಾಸಕರು, ಪ್ರತಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅತ್ಯುತ್ತಮವಾದ, ಜನ ಮೆಚ್ಚುವ ಆಡಳಿತವನ್ನು ಜನರಿಗೆ ನೀಡುತ್ತೇವೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.