ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಸ್ತಿನ ಪಾಠ ಮಾಡಿದ್ದಾರೆ.
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಎಲ್ಲಾ ಅಧಿಕಾರಿಗಳು ಬೆಳಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಜಿಲ್ಲಾ ಕೇಂದ್ರ ಕಚೇರಿಗೆ ಹಾಜರಾಗಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಇಲಾಖೆ ಆಡಳಿತ ಅಧಿಕಾರಿಗೆ ಸಂದೇಶ ಹೋಗಬೇಕು. ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಅವರವರ ಕಚೇರಿ ಮತ್ತು ಸಂಬಂಧಿಸಿದ ವೆಬ್ಸೈಟ್ ಗಳಲ್ಲಿ ಲಭ್ಯವಿರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಒಂದೇ ಜಿಲ್ಲೆ ಅಥವಾ ಕಚೇರಿಗಳಲ್ಲಿನ ವಿವಿಧ ಹುದ್ದೆಗಳಲ್ಲಿ ಒಂದೇ ಜಾತಿಯ ಅಧಿಕಾರಿಗಳು ಇರುವಂತಿಲ್ಲ. ಅಧಿಕಾರಿಗಳಲ್ಲಿಯೂ ಸಾಮಾಜಿಕ ನ್ಯಾಯ ಇರಬೇಕು. ಬೇರೆಬೇರೆ ಜಾತಿ, ಧರ್ಮದವರು ಇರಬೇಕು. ಅಧಿಕಾರಿಗಳ ಹಂತದಲ್ಲಿ ಜಾತಿ ಲಾಬಿ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿ ತಾಲೂಕಿನಲ್ಲಿಯೂ ಸಚಿವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಪ್ರತಿ ಹೋಬಳಿ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ ನಡೆಸಬೇಕು. ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆ ಬಗೆಹರಿಯಬೇಕು. ಮುಖ್ಯಮಂತ್ರಿಗಳ ಕಚೇರಿಯವರೆಗೂ ದೂರುಗಳು ಬರಬಾರದು. ಪ್ರತಿ ಜಿಲ್ಲೆಗೂ ಪ್ರವಾಸ ಮಾಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ.