ರಾಯ್ಪುರ: ಮರಳು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ , ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಸೇರಿದಂತೆ ಮೂವರನ್ನು ಪೆಟ್ರೋಲ್ ಸುರಿದು ಕಾರಿನೊಳಗೆ ಸುಟ್ಟು ಹತ್ಯೆ ಮಾಡಿರುವ ಘೋರ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಇಲ್ಲಿನ ಕೊರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಸೋನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಮರಳು ಗಣಿ ವ್ಯವಹಾರಕ್ಕೆ ಸಂಬಂಧಿಸಿದ ವಿವಾದ ಬಗೆಹರಿಸಲು ತೆರಳಿದ್ದ ಬಿಜೆಪಿ ಮುಖಂಡ, ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಮತ್ತು ಅವರ ಸಹಚರರನ್ನು ಪೂರ್ವಯೋಜಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಭರತ್ ಸಿಂಗ್ ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರನ್ನು ಟ್ರಕ್ಗಳ ಮೂಲಕ ಮುಂದೆ ಮತ್ತು ಹಿಂದೆ ಸುತ್ತುವರಿದು ದಾರಿಗಳನ್ನು ಬಂದ್ ಮಾಡಲಾಗಿತ್ತು. ಬಳಿಕ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯಿಂದಾಗಿ ಕಾರಿನಿಂದ ಹೊರಬರಲಾಗದೇ ಲಾಕ್ ಆಗಿದ್ದು, ಭರತ್ ಸಿಂಗ್ ಕಾರಿನೊಳಗೆ ಸಜೀವ ದಹನಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೀರೇಂದ್ರ ಸಿಂಗ್ ಚಿಕಿತ್ಸೆ ವೇಳೆ ಮೃತಪಟ್ಟರೆ, ಶಿಕ್ಷಕರಾಗಿದ್ದ ನಾಗೇಂದ್ರ ಸಿಂಗ್ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮಯಾಂಕ್ ಸಿಂಗ್ ಬಿಲಾಸ್ಪುರದ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಮರಳು ಗಣಿಗಾರಿಕೆ ಹಾಗೂ ಅಕ್ರಮ ವಸೂಲಾತಿ ವಿಚಾರವಾಗಿ ಭರತ್ ಸಿಂಗ್ ಬಣ ಮತ್ತು ಮನೋಜ್ ತ್ರಿಪಾಠಿ ಕುಟುಂಬದ ನಡುವೆ ಹಲವು ತಿಂಗಳುಗಳಿಂದ ತೀವ್ರ ವೈಮನಸ್ಸು ಇತ್ತು ಎಂಬುದು ಬೆಳಕಿಗೆ ಬಂದಿದೆ. ಇದೇ ವೈಷಮ್ಯ ಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಹಾಗೂ ಮನ್ನು ತ್ರಿಪಾಠಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ.