ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು ರದ್ದು ಕೋರಿ ಡಿ.ಕೆ ಶಿವಕುಮಾರ್, ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.
ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ’ನಾನೂ ಕರಸೇವಕ, ನನ್ನನ್ನೂ ಬಂಧಿಸ” ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದಕ್ಕೆ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ತಿರುಚಿ ಪೋಸ್ಟರ್ಗಳನ್ನು ಹಾಕಿದ್ದರು ಎಂದು ಆರೋಪಿಸಿ ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು.
ಕಾಂಗ್ರೆಸ್ ತಿರುಚಿದ ಪೋಸ್ಟರ್ಗಳು ಫೋರ್ಜರಿ ಮತ್ತು ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಉದ್ದೇಶ ಎಂದು ಆರೋಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಬಿಆರ್ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಬಳಿಕ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.