ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿ ಅಲಿಗಂಜ್ ಕೋಚಿಂಗ್ ಸೆಂಟರ್ ನಲ್ಲಿ ಸಂಭವಿಸಿದ್ದ ಬೆಂಕಿ ದುರಂತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ನಾಲ್ವರು ಹಿರಿಯ ಅಧಿಕಾಅರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕೋಚಿಂಗ್ ಸೆಂಟರ್ನಲ್ಲಿ ನಡೆದ ಅಗ್ನಿ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಮತ್ತು ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ನಡೆಸಿದ ಉನ್ನತ ಮಟ್ಟದ ಸಭೆಯ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ, ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. 7 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ. ಪ್ರವಾಸೋದ್ಯಮ, ಧಾರ್ಮಿಕ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮೃತ್ ಅಭಿಜತ್ ಅವರನ್ನು ಎಸ್ ಐಟಿಯಲ್ಲಿ ಸೇರಿಸಲಾಗಿದೆ.
ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದರು. ಗಾಯಗೊಂಡವರಿಗೆ ತಲಾ 50,000 ಆರ್ಥಿಕ ಸಹಾಯವನ್ನೂ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸರ್ಕಾರ, ಕರ್ತವ್ಯ ಲೋಪ ಎಸಗಿದ ವಿವಿಧ ಇಲಾಖೆಗಳ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದರಲ್ಲಿ ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಅಧಿಕಾರಿಗಳು ಸೇರಿದ್ದಾರೆ. ವಾಣಿಜ್ಯ ಕಟ್ಟಡದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೆ ಕೋಚಿಂಗ್ ಸೆಂಟರ್ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಸೂಕ್ತ ಸುರಕ್ಷತಾ ಮುನ್ನೆಚ್ಚರಿಕೆಗಳಿಲ್ಲದೆ ಸಂಸ್ಥೆ ನಡೆಸುತ್ತಿದ್ದ ಕೋಚಿಂಗ್ ಸೆಂಟರ್ನ ಮಾಲೀಕರು ಹಾಗೂ ಕಟ್ಟಡದ ವ್ಯವಸ್ಥಾಪಕರು ಸೇರಿದಂತೆ ಒಟ್ಟು 4 ಜನರನ್ನು ಬಂಧಿಸಲಾಗಿದೆ.
ಈ ಭೀಕರ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ, ರಾಜ್ಯಾದ್ಯಂತ ವಾಣಿಜ್ಯ ಕಟ್ಟಡಗಳಲ್ಲಿ, ಬೇಸ್ಮೆಂಟ್ಗಳಲ್ಲಿ ಹಾಗೂ ಕಿರಿದಾದ ಜಾಗಗಳಲ್ಲಿ ನಡೆಯುತ್ತಿರುವ ಎಲ್ಲಾ ಕೋಚಿಂಗ್ ಸೆಂಟರ್ಗಳು, ಶಾಲೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಅಗ್ನಿ ಸುರಕ್ಷತಾ ವ್ಯವಸ್ಥೆಯನ್ನು ಕಡ್ಡಾಯವಾಗಿ ತಪಾಸಣೆ ನಡೆಸುವಂತೆ ಆಡಳಿತ ಮಂಡಳಿಗೆ ಆದೇಶಿಸಿದೆ.