ದಾವಣಗೆರೆ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲ ಶಾಸಕರಿಂದ ಅಡ್ಡಮತದಾನ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಮತ್ತೊಂದೆಡೆ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ಕೂಡ ರಚನೆಯಾಗಿದೆ. ಈ ಬೆಳವಣಿಗಳ ನಡುವೆ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಅಡ್ಡಮತದಾನ ವಿಚಾರವಾಗಿ ಮಾತನಾಡಿರುವ ಮಾಜಿ ಶಾಸಕ ರೇಣುಕಾಚಾರ್ಯ, ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾಅನವಾಗಿರುವುದು ಜಗಜ್ಜಾಹೀರಾಗಿದೆ. ಈಗಾಗಲೇ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆಯಾಗಿದೆ. ಅವರು ಕೂಡ ವರದಿ ನೀಡಲಿದ್ದಾರೆ. ಯಾರು ಅಡ್ಡಮತದಾನ ಮಾಡಿದ್ದಾರೆ ಎನು? ಎಂಬುದು ನನಗೂ ಗೊತ್ತಿಲ್ಲ. ಆದರೆ ಕೆಲವರು ಹಣ ಪಡೆದು ಮೀರ್ ಸಾದಿಕ್ ಕೆಲಸ ಮಾಡುದ್ದಾರೆ ಎಂದು ಕಿಡಿಕಾರಿದರು.
ಹಣದ ಆಸೆಗಾಗಿ ಅಡ್ಡಮತದಾನ ಮಾಡಿದ್ದಾರೆ. ಪಕ್ಷ ತಾಯಿ ಸಮಾನ. ಕೆಲವರು ಅನಗತ್ಯವಾಗಿ ಈಬಾರಿ ಅಡ್ಡಮತದಾನ ಮಾಡಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವುದನ್ನು ಸಹಿಸಲು ಆಗದೇ ಅಡ್ಡಮತದಾನ ಮಾಡುವ ಮೂಲಕ ವಿಜಯೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದರು.
ಶೋಭಾ ಕರಂದ್ಲಾಅಜೆ ಅವರಿಗೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದು ಇಷ್ಟವಿಲ್ಲ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಸೋಮಶೇಖರ್ ಅವರು ಪಕ್ಷದಿಂದ ಹೊರಗಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವ ಅಗತ್ಯವಿಲ್ಲ. ಆದರೆ ಶೋಭಾ ಕರಂದ್ಲಾಜೆ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತೆ. ಸಂಘಪರಿವಾರದ ಹಿನ್ನಲೆಯುಳ್ಳವರು. ವಿಧಾನ ಪರಿಷತ್ ಸದಸ್ಯರಾಗಿ, ಶಾಸಕರಾಗಿ, ಸಚಿವರಾಗಿ ಉತ್ತರ ಕೆಲಸಗಳನ್ನು ಮಾಡಿದ್ದಾರೆ. ಮೂರು ಬಾರಿ ಲೋಕಸಭಾ ಸದಸ್ಯರಾಗಿ ಎರಡನೇ ಬಾರಿ ಕೇಂದ್ರದ ಮಂತ್ರಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಅವರ ಪಕ್ಷ ನಿಷ್ಠೆ ಬಗ್ಗೆ ಬೇರೆಯವರು ಹೇಳುವ ಅಗತ್ಯವಿಲ್ಲ. ಕೆಲವರ ಅನಗತ್ಯ ಮಾತುಗಳಿಗೆಲ್ಲ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು.
ಏನೇ ಷಡ್ಯಂತ್ರ ನಡೆಸಿದರೂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ. 2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಂದಿನ ದಿನಗಳಲ್ಲಿ ನಾವು ಉತ್ತಮ ಆಡಳಿತವನ್ನು ನೀಡಲಿದ್ದೇವೆ ಎಂಬ ವಿಶ್ವಾಸ ನನಗಿದೆ ಎಂದರು.