ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಇಲಾಖೆಯ ಈ ವರೆಗಿನ ಪ್ರಗತಿ ಹಾಗೂ ಈ ಸಾಲಿಗೆ ನಿಗದಿಪಡಿಸಲಾಗಿರುವ ಗುರಿಗಳ ಬಗ್ಗೆ ಮಾಹಿತಿ ಪಡೆದು, ಅಧಿಕಾರಿಗಳಿಗೆ ಸೂಚನೆ ನೀಡಿದರು.
* ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಬೇಕು.
* ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಬೇಕು.
* ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು.
* ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ ಆಗಬೇಕು.
* ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ಮಾಡಬೇಕು.
* ಸರ್ಕಾರದ ಜಾಗವನ್ನು ಪಡೆದು ಐದಾರು ವರ್ಷಗಳ ಕಾಲ ಖಾಲಿ ಬಿಟ್ಟರೆ ಸರ್ಕಾರಕ್ಕೆ ಯಾವುದೇ ಆದಾಯ ದೊರೆಯುವುದಿಲ್ಲ. ಅಷ್ಟೇ ಅಲ್ಲದೆ, ಈ ಅವಧಿಯಲ್ಲಿ ಉತ್ಪಾದನಾ ವೆಚ್ಚ, ಸರಕುಗಳ ಬೆಲೆ ಹಾಗೂ ಯೋಜನೆಯ ಒಟ್ಟು ಮೌಲ್ಯವೂ ಹೆಚ್ಚಾಗುತ್ತದೆ. ಇಂತಹ ವಿಳಂಬವನ್ನು ಸಹಿಸುವುದಿಲ್ಲ.
* ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಅವರಿಗೆ ತೊಂದರೆ ನೀಡಬಾರದು. ನಿಯಮಾನುಸಾರ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು.
* ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.
* ಇಲಾಖೆಯ ಆಡಳಿತ ವ್ಯವಸ್ಥೆ, ಪ್ರಮುಖ ಯೋಜನೆಗಳು ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಇಂದು ಪಡೆಯಲಾಗಿದ್ದು, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು.
* ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಮಾನವ ಗಾಯ, ಆಸ್ತಿನಾಶ, ಮಾಶಾಸನ ಗಳಿಗಾಗಿ 2025-26ನೇ ಸಾಲಿನಲ್ಲಿ 6,306 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮಾನವ, ಅರಣ್ಯಜೀವಿ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್, ಆನೆತಡೆ ಕಂದಕ ಮತ್ತು ಸೌರತಂತಿ ಬೇಲಿಗಳನ್ನು ಅಳವಡಿಸಲಾಗುತ್ತಿದೆ ಹಾಗೂ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ಹಾಗೂ ಎಸ್ಎಂಎಸ್ ಮತ್ತು ಇತರೆ ಡಿಜಿಟಲ್ ಬೋರ್ಡ್ಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಇಷ್ಟಾದರೂ ಪ್ರಾಣಿಗಳು ಸಹ ಈ ಎಲ್ಲಾ ಅಡೆತಡೆಗಳನ್ನು ದಾಟಲು ನಾನಾ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಹೀಗಾಗಿ ಅಧಿಕಾರಿಗಳು ಕೂಡ ಆಗಾಗ್ಗೆ ಇತರೆ ಹೊಸ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಬೇಕು.
ಚರ್ಚೆ ಆದ ಇತರೆ ವಿಚಾರಗಳು:
* ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ಮತ್ತು ಚರ್ಚೆ.
* ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್ ಡ್ರೋಣ್ ವ್ಯವಸ್ಥೆ.
* ಶರಾವತಿ ಪಂಪ್ ಸ್ಟೋರೇಜ್, ಗೋವಾ ತಮ್ನೇರ್, ಕಳಸಾ ಬಂಡೂರಿ ಮತ್ತು ಬಿಡಿಎ ಫೆರಿಫೆರಲ್ ರಿಂಗ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಅರಣ್ಯ ಇಲಾಖೆಗಳ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರಣ್ಯ ಅನುಮತಿ ವಿಚಾರಗಳಲ್ಲಿ ತ್ವರಿತ ಗತಿಯಲ್ಲಿ ಕ್ರಮ ವಹಿಸುವುದು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸಿಎಂ ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.