ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ, ನಾಗರಹೊಳೆ ಸಫಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆಯು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸಲು ಸಮ್ಮತಿಸಲಾಗಿದೆ.
ಹಾಗೆಯೇ ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ತಾಂತ್ರಿಕ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳ ತೆರವಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಆದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ರಾಯಭಾರಿ ಅನಿಲ್ ಕುಂಬ್ಳೆ ಅವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.