ಬೀದರ್: ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೃತ ಮಹಿಳೆಯ ಪತಿ, ಅತ್ತೆ ಮತ್ತು ಮಾವನಿಗೆ ಏಳು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಳಸದಾಳ ಗ್ರಾಮದ ಸುಮಯ್ಯಾ ಮೃತಪಟ್ಟ ಮಹಿಳೆ. ಹುಮ್ನಾಬಾದ್ ತಾಲೂಕಿನ ಹಿಲಾಲಪುರ ಗ್ರಾಮದ ಸಜ್ಜದ್ ಬಾಬು ಪಟೇಲ್, ಅತ್ತೆ ಸಿದ್ದಿಖಿ ಬಾಬು ಪಟೇಲ್, ಮಾವ ಬಾಬು ಪಟೇಲ್ ಅವರಿಗೆ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
2023ರ ಮೇ 14ರಂದು ಸುಮಯ್ಯಾ ಮತ್ತು ಸಜ್ಜದ್ ಮದುವೆಯಾಗಿದ್ದು, ನಂತರ ಸಜ್ಜದ್ ಮತ್ತು ಆತನ ತಂದೆ, ತಾಯಿ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು 2024ರ ಏಪ್ರಿಲ್ 12ರಂದು ಮನೆಯಲ್ಲಿ ನೇಣು ಹಾಕಿಕೊಂಡು ಸುಮಯ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರಿಗೆ ಏಳು ವರ್ಷ ಜೈಲು ಶಿಕ್ಷೆ, ತಲಾ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲರಾದಲ್ಲಿ 15 ದಿನ ಹೆಚ್ಚುವರಿ ಜೈಲು ಶಿಕ್ಷೆ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶರಣಗೌಡ ವಾದ ಮಂಡಿಸಿದ್ದರು.