ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ವಿಶೇಷ ಕಾರ್ಯಚರಣೆ ಬುಧವಾರದಿಂದ ಆರಂಭವಾಗಲಿದೆ. ಒತ್ತುವರಿದಾರರಿಗೆ ಭಾರಿ ದಂಡ ವಿಧಿಸಲಿದ್ದು ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಒತ್ತುವರಿದಾರರು ಸ್ವಯಂ ತೆರವುಗೊಳಿಸಲು ಮಂಗಳವಾರದವರೆಗೂ ಗಡುವು ನೀಡಲಾಗಿದ್ದು, ಬುಧವಾರದಿಂದ ವಿಶೇಷ ಕಾರ್ಯಾಚರಣೆ ಆರಂಭವಾಗಲಿದೆ. ಫುಟ್ ಪಾತ್ ಒತ್ತುವರಿ ತೆರವುಗೊಳಿಸಲಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಯಾರನ್ನೂ ಒಕ್ಕಲಿಬ್ಬಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ. ಪಾದಚಾರಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಸುಮಾರು ಶೇಕಡ 20ರಷ್ಟು ಪ್ರಮುಖ ರಸ್ತೆಗಳಲ್ಲಿ ಮಾತ್ರ ಪಾದಚಾರಿಗಳ ಸುರಕ್ಷತೆಯ ದೃಷ್ಟಿಯಿಂದ ಬೀದಿ ವ್ಯಾಪಾರ ಮಾಡದಂತೆ ಮನವಿ ಮಾಡಲಾಗಿದೆ. ಉಳಿದ ಶೇಕಡ 80ರಷ್ಟು ರಸ್ತೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶವಿದೆ. ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸಲು ಎಲ್ಲರೂ ಸಹಕರಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ.
ಅಂಗಡಿ ಮುಂಭಾಗದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿರುವವರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ತೆರವುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.